ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ
Update: 2017-08-16 16:11 GMT
ಮದ್ದೂರು, ಆ.16: ಸಾಲಬಾಧೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅಂಬರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಲೇಟ್ ದೊಡ್ಡಣ್ಣ ಅವರ ಪುತ್ರ ರಮೇಶ್ (50) ಆತ್ಮಹತ್ಯೆ ಮಾಡಿಕೊಂಡ ರೈತರಾಗಿದ್ದು, ಇವರು ತನ್ನ ಪಾಲಿನ 20 ಗುಂಟೆ ಜಮೀನಿನಲ್ಲಿ ಕೃಷಿ ನಡೆಸಿ ಜೀವನ ಸಾಗಿಸುತ್ತಿದ್ದರು.
ಈಚೆಗೆ ತನ್ನ ಮಗಳ ಮದುವೆಗಾಗಿ ಖಾಸಗಿ ವ್ಯಕ್ತಿಗಳಿಂದ ಸುಮಾರು 2 ಲಕ್ಷ ರೂ. ಸಾಲ ಮಾಡಿಕೊಂಡಿದ್ದು, ಬರದ ಹಿನ್ನೆಲೆಯಲ್ಲಿ ಬೆಳೆಯಾಗದೆ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ.
ಸಾಲಗಾರರ ಕಾಟದಿಂದ ಬೇಸತ್ತ ರಮೇಶ್ ಬುಧವಾರ ಬೆಳಗ್ಗೆ ತನ್ನ ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದು, ಜಿಲ್ಲಾಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ಪ್ರಕರಣ ದಾಖಲಾಗಿದೆ.
ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ರಮೇಶ್ ಕುಟುಂಬದವರಿಗೆ ಸಾಂತ್ವನ ಹೇಳಿದರು. ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.