ವಿಚಾರ ತನಿಖೆಯ ಅಂತಿಮ ವರದಿ ಸಲ್ಲಿಸದಂತೆ ಎಸಿಬಿಗೆ ಹೈಕೋರ್ಟ್ ನಿರ್ದೇಶನ

Update: 2017-08-17 17:32 GMT

ಬೆಂಗಳೂರು, ಆ.17: ಭ್ರಷ್ಟಾಚಾರ ಆರೋಪದಡಿಯಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿರುವ ಸರಕಾರಿ ಅಧಿಕಾರಿಗಳ ವಿರುದ್ಧದ ತನಿಖೆಯ ಸಂಬಂಧ ಅಂತಿಮ ವರದಿ ಸಲ್ಲಿಸದಂತೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ.

  ಎಸಿಬಿ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಎಂ.ಪುಟ್ಟಸ್ವಾಮಿ ಸೇರಿದಂತೆ 18ಕ್ಕೂ ಹೆಚ್ಚು ಸರಕಾರಿ ಅಧಿಕಾರಿಗಳು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಪೀಠ, ಎಸಿಬಿ ರಚನೆ ಮಾಡಿ ಸರಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಇದೇ ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿ ಇವೆ. ಈ ಅರ್ಜಿಗಳ ಸಂಬಂಧ ವಿಭಾಗೀಯ ಪೀಠ ತೀರ್ಮಾನ ಪ್ರಕಟಿಸುವವರೆಗೆ ಏಕಸದಸ್ಯ ಪೀಠ ಯಾವುದೇ ಆದೇಶ ಹೊರಡಿಸುವುದು ಸೂಕ್ತವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ ವಿಚಾರಣೆಯನ್ನು 4 ವಾರಗಳ ಕಾಲ ಮುಂದೂಡಿತು.

 ಇದೇ ವೇಳೆ ತಮ್ಮ ಕಕ್ಷಿದಾರರ ವಿರುದ್ಧದ ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ನೀಡುವಂತೆ ಅರ್ಜಿದಾರರ ಪರ ವಕೀಲರು ಮಾಡಿದ ಮನವಿಯನ್ನು ತಳ್ಳಿಹಾಕಿದ ನ್ಯಾಯಪೀಠ, ಎಸಿಬಿ ರಚನೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳು ಇತ್ಯರ್ಥವಾಗುವವರೆಗೆ ಪ್ರಕರಣದ ತನಿಖೆಯ ಸಂಬಂಧ ಅಂತಿಮ ವರದಿ ಸಲ್ಲಿಸದಂತೆ ಎಸಿಬಿಗೆ ನಿರ್ದೇಶಿಸಿತು.

ವಿಭಾಗೀಯ ಪೀಠದಲ್ಲಿ ಪಿಐಎಲ್ ಇತ್ಯರ್ಥವಾದ ಬಳಿಕ ಅರ್ಜಿದಾರರು ಮತ್ತೆ ತಮ್ಮ ಅರ್ಜಿಗಳನ್ನು ವಿಚಾರಣೆ ನಡೆಸುವಂತೆ ಏಕಸದಸ್ಯ ಪೀಠವನ್ನು ಕೋರಬಹುದು ಅಥವಾ ವಿಭಾಗೀಯ ಪೀಠದ ಮುಂದೆಯೇ ಅರ್ಜಿ ಸಲ್ಲಿಸಿ, ಪಿಐಎಲ್‌ನೊಂದಿಗೆ ತಮ್ಮ ಅರ್ಜಿಗಳನ್ನೂ ವಿಚಾರಣೆಗೆ ಪರಿಗಣಿಸುವಂತೆ ಮನವಿ ಮಾಡಬಹುದು ಎಂದು ಅರ್ಜಿದಾರರಿಗೆ ಸೂಚಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು 4 ವಾರಗಳ ಕಾಲ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News