ಆ.27 ರಂದು ಬೃಹತ್ ಉದ್ಯೋಗ ಮೇಳ
ಕಡೂರು, ಆ. 20: ಪಟ್ಟಣದ ಬಿಜಿಎಸ್ ಶಾಲಾ ಆವರಣದಲ್ಲಿ ಆ.27 ರಂದು ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚದ ರಾಜ್ಯ ಕಾರ್ಯದರ್ಶಿ ಜಿ.ಕೆ. ಗಿರೀಶ್ಉಪ್ಪಾರ ತಿಳಿಸಿದರು.
ಅವರು ಭಾನುವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಈಗಾಗಲೇ 5 ಸಾವಿರಕ್ಕೂ ಹೆಚ್ಚು ಜನರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಹೆಸರು ನೊಂದಾಯಿಸಿಕೊಂಡಿದ್ದಾರೆ ಇನ್ನೂ 3 ಸಾವಿರ ಜನರು ನೊಂದಣಿಯಾಗುವ ನಿರೀಕ್ಷೆಯಿದೆ. ಮೇಳದಲ್ಲಿ ಮೇಳದಲ್ಲಿ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಒಟ್ಟಾರೆ ಈ ಕಂಪನಿಗಳಲ್ಲಿ 13,816 ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅಂದು ಸಂದರ್ಶನ ನಡೆಸಿ ಸ್ಥಳದಲ್ಲಿಯೇ ನೇಮಕಾತಿ ಪತ್ರ ನೀಡಲಾಗುವುದು ಎಂದು ಹೇಳಿದರು.
ಅಲ್ಲದೆ ಗ್ರಾಮೀಣ ಭಾಗದ ಬಹಳಷ್ಟು ಜನರಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳುವ ಬಗ್ಗೆ ಅಂಜಿಕೆ ಮತ್ತು ಭಯ ಇರುತ್ತದೆ. ಈ ಭಯವನ್ನು ಹೋಗಲಾಡಿಸಲು ಪೂರಕವಾಗಿ ಆ. 26 ರಂದು ಅದೇ ಶಾಲಾ ಆವರಣದಲ್ಲಿ ಸಂದರ್ಶನ ತರಬೇತಿ ಕಾರ್ಯಾಗಾರವನ್ನು ನಡೆಸಲಾಗುವುದು ಎಂದು ನುಡಿದರು.
ಉದ್ಯೋಗ ಮೇಳ ಕಾರ್ಯಕ್ರಮದ ಸಾನಿದ್ಯವನ್ನು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮಿ, ಹೊಸದುರ್ಗ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮಿ ಹಾಗೂ ಶೃಂಗೇರಿ ಶಾಖಾಮಠದ ಶ್ರೀ ಗುಣನಾಥಸ್ವಾಮಿ ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆ ರೇಣುದೇವಿ ವಹಿಸಲಿದ್ದಾರೆ. ವಿಧಾನಪರಿಷತ್ ವಿರೋಧಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ, ಶಿಕಾರಿಪುರ ಶಾಸಕ ಬಿ.ವೈ. ರಾಘವೇಂದ್ರ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.