×
Ad

ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಲಕ್ಷ್ಮಿಹೆಬ್ಬಾಳ್ಕರ್ ವಿರುದ್ಧ ವ್ಯಾಪಕ ಆಕ್ರೋಶ

Update: 2017-08-31 20:01 IST

ಬೆಂಗಳೂರು, ಆ. 31: ‘ಮಹಾರಾಷ್ಟ್ರಕ್ಕೆ ಜೈ’ ಎಂಬ ಕರ್ನಾಟಕ ವಿರೋಧಿ ಹೇಳಿಕೆ ನೀಡಿದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿಹೆಬ್ಬಾಳ್ಕರ್ ಅವರನ್ನು ಇಪ್ಪತ್ತ ನಾಲ್ಕು ಗಂಟೆಯೊಳಗೆ ಪಕ್ಷದಿಂದ ವಜಾಗೊಳಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಂದು ಕನ್ನಡಪರ ಸಂಘಟನೆಗಳು ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆ ನೀಡಿವೆ.

ಗುರುವಾರ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದ್, ಕೆ.ಆರ್.ಕುಮಾರ್ ಸೇರಿದಂತೆ ಇನ್ನಿತರ ಮುಖಂಡರು, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ದೂರು ನೀಡಿದ್ದು, ಹೆಬ್ಬಾಳ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜೈ ಮಹಾರಾಷ್ಟ್ರ ಎಂದು ಕೂಗುವ ಮೂಲಕ ಕರ್ನಾಟಕಕ್ಕೆ ಅಪಮಾನ ಮಾಡಿದ್ದಾರೆ. ಅವರನ್ನು ಕೂಡಲೇ ಅಧ್ಯಕ್ಷೆ ಸ್ಥಾನದಿಂದ ವಜಾಗೊಳಿಸಿ, ಶಿಸ್ತುಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ನಾಳೆಯಿಂದ ಬೆಳಗಾವಿ ಸೇರಿ ರಾಜ್ಯಾದ್ಯಂತ ತೀವ್ರ ಸ್ವರೂಪದ ಹೋರಾಟ ರೂಪಿಸಲಾಗುವುದು ಎಂದು ವಾಟಾಳ್ ನಾಗರಾಜ್ ಎಚ್ಚರಿಸಿದರು.

ಬೆಳಗಾವಿಯಲ್ಲಿ ರಾಜಕಾರಣಿಗಳು ಮತ್ತು ಲೋಕಸಭಾ ಸದಸ್ಯರು ಸೇರಿದಂತೆ ಎಲ್ಲರೂ ಮಹಾರಾಷ್ಟ್ರ ಮತ್ತು ಮರಾಠಿಗರ ಪರವಾಗಿದ್ದಾರೆ. ನಾಡಿಗೆ ದ್ರೋಹ ಮಾಡುತ್ತಿದ್ದಾರೆ. ಬೆಳಗಾವಿಯಲ್ಲಿ ಕನ್ನಡ ಭಾಷೆ, ಗಡಿ ರಕ್ಷಣೆಗಾಗಿ ಅಲ್ಲಿನ ಕನ್ನಡಪರ ಸಂಘಟನೆಗಳು ಕೆಲಸ ಮಾಡುತ್ತಿವೆ ಎಂದು ಅವರು ಹೇಳಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮರಾಠಿ ಭಾಷಿಕರ ಸಭೆಯಲ್ಲಿ ಮರಾಠಿ ಭಾಷೆಯಲ್ಲೇ ಮಾತನಾಡಿರುವ ಲಕ್ಷ್ಮಿ ಹೆಬ್ಬಾಳ್ಕರ್, ‘ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ಎಲ್ಲರಿಗಿಂತ ಮೊದಲು ನಾನು ಜೈ ಮಹಾರಾಷ್ಟ್ರ ಎಂದು ಬಾವುಟ ಹಿಡಿದು ಕೂಗುವೆ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.

‘ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆ ರೀತಿಯ ಹೇಳಿಕೆ ನೀಡಿರಲು ಸಾಧ್ಯವಿಲ್ಲ. ಎಂಇಎಸ್-ಬಿಜೆಪಿ ಈ ಬಗ್ಗೆ ಪಿತೂರಿ ನಡೆಸಿರುವ ಸಾಧ್ಯತೆಗಳಿವೆ’.
-ಸಿದ್ದರಾಮಯ್ಯ ಮುಖ್ಯಮಂತ್ರಿ


‘ಕಿತ್ತೂರು ಚೆನ್ನಮ್ಮನ ನಾಡಿನವಳೆಂದು ಅತ್ಯಂತ ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ತಾನೆಂದು ನಾಡ ವಿರೋಧಿ ಹೇಳಿಕೆ ನೀಡುವುದಿಲ್ಲ. ನನ್ನ ರಾಜಕೀಯ ವಿರೋಧಿಗಳು ನನ್ನ ಭಾಷಣದ ತುಣುಕನ್ನು ಪ್ರತ್ಯೇಕಿಸಿ ವಿವಾದ ಸೃಷ್ಟಿಸುತ್ತಿದ್ದಾರೆ. ಒಂದು ವೇಳೆ ನನ್ನ ಹೇಳಿಕೆಯಿಂದ ರಾಜ್ಯದ ಜನರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ.’
-ಲಕ್ಷ್ಮಿಹೆಬ್ಬಾಳ್ಕರ್ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News