ಮನುಷ್ಯನ ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ: ಅಜಿತ್ ಕುಮಾರ್ ರೈ
ಶಿಡ್ಲಘಟ್ಟ, ಸೆ.6: ಕ್ರೀಡೆಯು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಬೇಕು. ಜೀವನದಲ್ಲಿ ಆರೋಗ್ಯವಂತ ದೇಹ ಮತ್ತು ಮನಸ್ಸು ಇದ್ದಾಗ ಮಾತ್ರ ಮನುಷ್ಯ ಕಷ್ಟ, ಒತ್ತಡಗಳನ್ನು ಎದುರಿಸಲು ಸಾಧ್ಯ ಎಂದು ತಹಶೀಲ್ದಾರ್ ಅಜಿತ್ ಕುಮಾರ್ ರೈ ತಿಳಿಸಿದರು.
ನಗರದ ನೆಹರೂ ಕ್ರೀಡಾಂಗಣದಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಗೆ ಕೊಡುವ ಪ್ರಾಮುಖ್ಯತೆ ನಂತರದ ದಿನಗಳಲ್ಲಿ ಕಡಿಮೆಯಾಗುತ್ತದೆ. ಕ್ರೀಡೆ ಮನುಷ್ಯನ ಆರೋಗ್ಯ ವೃದ್ಧಿಗೆ ಸಹಕಾರಿ. ಕ್ರೀಡೆಗಳಲ್ಲಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿದಾಗ ಮಾತ್ರ ಸ್ಪರ್ಧೆಗೆ ಮಹತ್ವ ಬರುತ್ತದೆ. ಕ್ರೀಡಾಳು ಛಲದಿಂದ ಮುನ್ನುಗ್ಗಿದಾಗ ಮಾತ್ರ ಗುರಿಯ ಯಶಸ್ಸು ಮುಟ್ಟಲು ಸಾಧ್ಯ ಎಂದು ಹೇಳಿದರು.
ಕ್ರೀಡಾಕೂಟದ ಧ್ವಜವಂದನೆ ಮತ್ತು ಧ್ವಜಾರೋಹಣವನ್ನು ನಗರ ಸಭೆ ಅಧ್ಯಕ್ಷ ಅಫ್ಸರ್ ಪಾಷ ನೆರವೇರಿಸಿದರು. ಈ ಸಂದರ್ಭದಲ್ಲಿ ಕ್ರೀಡಾಜ್ಯೋತಿಯನ್ನು ಬೆಳಗುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಜಿಪಂ ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು, ಇಒ ವೆಂಕಟೇಶ್, ನಗರ ಸಭೆಯ ಆಯುಕ್ತ ಚಲಪತಿ,ಉಪಾಧ್ಯಕ್ಷೆ ಪ್ರಭಾವತಿ ಸುರೇಶ್, ತಾಪಂ ಉಪಾಧ್ಯಕ್ಷ ಎಚ್.ನರಸಿಂಹಯ್ಯ, ರಂಗನಾಥ್, ಶ್ರೀರಾಮಯ್ಯ, ವಿಜಯಕುಮಾರ್ ಹಾಜರಿದ್ದರು.