ದ.ಕ.ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧಿಸಲು ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು, ಆ.6: ರಾಜ್ಯ ಬಿಜೆಪಿ ಯುವ ಮೋರ್ಚಾದ ವತಿಯಿಂದ ಆಯೋಜಿಸಿರುವ ಮಂಗಳೂರು ಚಲೋ ಬೈಕ್ ರ್ಯಾಲಿಯನ್ನು ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧಿಸಲು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಸಂಬಂಧ ಮಂಗಳೂರಿನ ಸುಹೈಲ್ ಖಾನ್ ಹಾಗೂ ಇತರ ಐವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ದಿನೇಶ್ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠವು ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿತು.
ಕಳೆದ ಮೂರು ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೆಂದೂ ಕಂಡರಿಯದ ಕೋಮು ಗಲಭೆಗಳು ಸಂಭವಿಸಿವೆ. ಎರಡು ಪ್ರಮುಖ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರ ಹತ್ಯೆ ನಡೆದಿವೆ. ಇದರಿಂದ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದ್ದು, ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗಿದೆ. ಇದೀಗ ಮತ್ತೆ ರ್ಯಾಲಿಯ ನೆಪದಲ್ಲಿ ಸಾವಿರಾರು ಜನ ಸೇರಿದರೆ ಮತ್ತಷ್ಟು ಅಹಿತಕರ ಘಟನೆಗಳು ಸಂಭವಿಸಿ ಕಾನೂನು ಸುವ್ಯಸ್ಥೆಗೆ ಧಕ್ಕೆಯಾಗಲಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಈ ಹಂತದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿರುವ ಬೈಕ್ ರ್ಯಾಲಿ ಇದೇ ತಿಂಗಳ 7ರಂದು ದಕ್ಷಿಣ ಕನ್ನಡ ಜಿಲ್ಲೆ ತಲುಪಲಿದೆ. ಇದರಿಂದ ಮತ್ತೆ ಕೋಮು ಗಲಭೆ ಸಂಭವಿಸಿ ಜಿಲ್ಲೆಯಲ್ಲಿ ಶಾಂತಿಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ರ್ಯಾಲಿಯ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಕೋರಿದ್ದರು.