×
Ad

ಯಾತ್ರಾರ್ಥಿಗಳ ಅನುಕೂಲಕ್ಕೆ ವಸತಿ ಗೃಹ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

Update: 2017-09-15 18:23 IST

ಬೆಂಗಳೂರು, ಸೆ.15: ತಿರುಪತಿಯ ತಿರುಮಲದ ಕರ್ನಾಟಕ ಪ್ರವಾಸಿ ಸೌಧ ಆವರಣದಲ್ಲಿ ನೂತನ ಕಟ್ಟಡ ನಿರ್ಮಿಸಲು ಉಂಟಾಗಿದ್ದ ತೊಡಕು ನಿವಾರಣೆ ಆಗಿದ್ದು, ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಹೊಸದಾಗಿ ವಸತಿ ಗೃಹಗಳನ್ನು ನಿರ್ಮಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ತಿರುಪತಿಯಲ್ಲಿ ವಸತಿ ಗೃಹಗಳ ನಿರ್ಮಾಣ ಕುರಿತು ಚರ್ಚಿಸಲು ಕರೆದಿದ್ದ ಸಭೆಯಲ್ಲಿ ಮಾತನಾಡಿದರು.

ಕರ್ನಾಟಕ ಪ್ರವಾಸಿ ಸೌಧದ ಆವರಣದಲ್ಲಿ ವಸತಿ ಗೃಹಗಳನ್ನು ನಿರ್ಮಿಸುವ ಯೋಜನೆ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು.
ತಿರುಪತಿ ತಿರುಮಲ ದೇವಸ್ಥಾನದ ಆಡಳಿತ ಮಂಡಳಿ ಒಪ್ಪಿಗೆ ನೀಡದಿದ್ದುದು ಇದಕ್ಕೆ ಕಾರಣವಾಗಿತ್ತು. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಈ ವಿಷಯ ಪ್ರಸ್ತಾಪ ಆಗಿತ್ತು. ವಸತಿಗೃಹಗಳ ಕೊರತೆಯಿಂದಾಗಿ ಯಾತ್ರಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅಧಿಕಾರಿಗಳು ಸಭೆಯಲ್ಲಿ ವಿವರಿಸಿದರು.

61.390 ಚದರ ಅಡಿ ಪ್ರದೇಶದಲ್ಲಿ ಕಟ್ಟಡವನ್ನು ಹೊಸದಾಗಿ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿ ಸೂಚಿಸಿದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳ ಸಭೆಯಲ್ಲಿ ಪ್ರಸ್ತಾವನೆ ಕುರಿತು ಚರ್ಚಿಸಿದರು. ಕರ್ನಾಟಕ ಪ್ರವಾಸಿ ಸೌಧದಲ್ಲಿ ಹಾಲಿ ಇರುವ 86 ಕೊಠಡಿಗಳ ದುರಸ್ತಿ ಕಾರ್ಯವನ್ನು ಶೀಘ್ರವೇ ಕೈಗೆತ್ತಿಕೊಳ್ಳೇಕೆಂದು ಇದೇ ವೇಳೆ ಸೂಚಿಸಿದರು.

ತಿರುಪತಿ ನಗರದ ಗಾಂಧಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಛತ್ರಕ್ಕೆ ಸೇರಿದ 20 ಸಾವಿರ ಚದರ ಅಡಿ ವಿಸ್ತೀರ್ಣದ ಜಾಗದಲ್ಲಿ ಕರ್ನಾಟಕದ ಯಾತ್ರಾರ್ಥಿಗಳಿಗೆ ಮದುವೆ ಮತ್ತು ಇತರೆ ಸಮಾರಂಭಗಳನ್ನು ನಡೆಸಲು ಅನುಕೂಲ ಆಗುವಂತೆ ಕಲ್ಯಾಣ ಮಂಟಪ, ವಸತಿಗೃಹಗಳನ್ನು ನಿರ್ಮಿಸುವಂತೆ ಸೂಚನೆ ನೀಡಿದರು.

ಜೊತೆಗೆ ಬೆಂಗಳೂರು-ತಿರುಪತಿ ನಡುವೆ ನೇರ ವಿಮಾನ ಸೇವೆ ಆರಂಭಿಸಲು ಕೇಂದ್ರ ನಾಗರಿಕ ವಿಮಾನ ಯಾನ ಸಚಿವಾಲಯವನ್ನು ಕೋರಲು ತಿಳಿಸಿದರು.

ಸಬೆಯಲ್ಲಿ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಲಕ್ಷ್ಮಿ ನಾರಾಯಣ, ರತ್ನಪ್ರಭಾ ಹಾಗೂ ಮುಜರಾಯಿ ಇಲಾಖೆ ಆಯುಕ್ತ ಷಡಕ್ಷರ ಸ್ವಾಮಿ ಸಭೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News