ಜನನ- ಮರಣ ನೋಂದಣಿ ಕಡ್ಡಾಯ: ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ

Update: 2017-09-21 16:20 GMT

ಉಡುಪಿ, ಸೆ.21: ಜಿಲ್ಲೆಯ ಪ್ರತಿಯೊಂದು ಜನನ ಮತ್ತು ಮರಣದ ವರದಿ ಯನ್ನು ಕಡ್ಡಾಯವಾಗಿ ನೊಂದಣಿ ಮಾಡುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮರಣ ನೊಂದಣಿ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯ ಪ್ರತಿಯೊಂದು ಜನನ ಮತ್ತು ಮರಣದ ನೊಂದಣಿ ಕಡ್ಡಾಯ ವಾಗಿದ್ದು, ಮನೆಗಳಲ್ಲಿ ಸಂಭವಿಸುವ ಜನನ ಮತ್ತು ಮರಣದ ಕುರಿತು ಸ್ಥಳಿಯ ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು ಹಾಗೂ ಗ್ರಾಮ ಲೆಕ್ಕಿಗರು ಸಂಬಂಧಪಟ್ಟ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಜನನ ಅಥವಾ ಮರಣ ಸಂಭವಿಸಿದ 21 ದಿನಗಳ ಒಳಗೆ ಸಂಬಂಧಪಟ್ಟ ನೊಂದಣಾಧಿಕಾರಿಯಿಂದ ಪ್ರಮಾಣ ಪತ್ರ ಪಡೆಯುವಂತೆ ಹಾಗೂ ತಡ ನೊಂದಣಿಗೆ ಅವಕಾಶ ನೀಡದಂತೆ ತಿಳಿಸಿದರು.

ಗ್ರಾಮಾಂತರ ಹಾಗೂ ನಗರ ಪ್ರದೇಶದಲ್ಲಿರುವ ಎಲ್ಲಾ ಜನನ ಮರಣ ನೊಂದಣಾಧಿಕಾರಿಗಳಿಗೆ ಹಾಗೂ ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳಿಗೆ, ಅಂಗನವಾಡಿ ಹಾಗೂ ಆರೋಗ್ಯ ಕಾರ್ಯಕರ್ತೆಯರಿಗೆ ಜನನ ಮರಣ ನೊಂದಾವಣಿ ಮಾಡುವ ಕುರಿತಂತೆ ಪ್ರತ್ಯೇಕ ಕಾರ್ಯಾಗಾರ ನಡೆಸಿ ಸಮಗ್ರ ಮಾಹಿತಿ ನೀಡುವಂತೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯಲ್ಲಿ 2016ರಲ್ಲಿ 16,215 ಜನನ ಹಾಗೂ 9,247 ಮರಣ ಸಂಭವಿಸಿದ್ದು, 2870 ತಡ ನೊಂದಣಿ ಪ್ರಕರಣ ದಾಖಲಾಗಿದೆ. ಪ್ರಸಕ್ತ 2017ರ ಆಗಸ್ಟ್ ತಿಂಗಳವರೆಗೆ ಜಿಲ್ಲೆಯಲ್ಲಿ 9449 ಜನನ ಮತ್ತು 2618 ಮರಣ ದಾಖಲಾಗಿದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಡಾ. ಉದಯ ಶೆಟ್ಟಿ ಮಾಹಿತಿ ನೀಡಿದರು.

ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂವಿತಾ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News