ನರಗುಂದ ಬಯಲು ಬಹಿರ್ದೆಸೆ ಮುಕ್ತ ತಾಲೂಕು: ವೆಂಕಯ್ಯ ನಾಯ್ಡು ಘೋಷಣೆ
ಗದಗ, ಸೆ.26: ಗದಗ ಜಿಲ್ಲೆಯ ನರಗುಂದ ಬಯಲು ಬಹಿರ್ದೆಸೆ ಮುಕ್ತ ತಾಲೂಕು ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಘೋಷಿಸಿದ್ದಾರೆ.
ಮಂಗಳವಾರ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನರಗುಂದ 34 ಗ್ರಾಮಗಳನ್ನು ಹೊಂದಿರುವ ತಾಲೂಕಾಗಿದ್ದು, ಗ್ರಾಮದ ಎಲ್ಲ ಮನೆಗಳಲ್ಲಿ ಶೌಚಾಲಯ ನಿರ್ಮಿಸಲಾಗಿದೆ. ದೇಶದ ಇತಿಹಾಸದಲ್ಲಿ ಈ ಗ್ರಾಮದ ಹೆಸರು ಚಿರಸ್ಥಾಯಿಯಾಗಿ ಉಳಿಯಲಿದೆ ಎಂದರು.
ತಮ್ಮ ಗ್ರಾಮಗಳ ಅಭಿವೃದ್ಧಿ ಬಗ್ಗೆ ಯುವಜನತೆ ಶ್ರದ್ಧೆ ವಹಿಸಬೇಕು ಎಂದು ಕರೆ ನೀಡಿದ ಅವರು, ಕೊಣ್ಣೂರು ಸ್ವಚ್ಛ ಭಾರತ ಮಿಷನ್ ಎಂಬ ಕಾರ್ಯಕ್ರಮದಡಿ ನರಗುಂದದಲ್ಲಿ ಶೌಚಾಲಯ ನಿರ್ಮಿಸುವ ಕಾರ್ಯವನ್ನು ಕೈಗೊಳ್ಳಲಾಗಿತ್ತು. ಸುಮಾರು 34 ಗ್ರಾಮಗಳನ್ನು ಹೊಂದಿರುವ ತಾಲೂಕಿನಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದ್ದು, ಜನರು ಗ್ರಾಮ ಪಂಚಾಯತ್ ನೆರವಿನಿಂದ ತನ್ನ ಮನೆಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಈ ವೇಳೆ ವೆಂಕಯ್ಯ ನಾಯ್ಡು ಅವರು ನರಗುಂದದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ, ತಾಜ್ಯ ಸಂಸ್ಕರಣಾ ಘಟಕ, ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು. ಅಲ್ಲದೆ, ಬಯಲು ಬಹಿರ್ದೆಸೆ ಮುಕ್ತ ತಾಲೂಕು ರಚನೆಗೆ ಶ್ರಮಿಸಿದ 13 ಗ್ರಾಮ ಪಂಚಾಯತ್ ಗಳ ಅಧ್ಯಕ್ಷರನ್ನು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯಪಾಲ ವಿ.ಆರ್.ವಾಲಾ, ಗ್ರಾಮೀಣಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ಉಪಸ್ಥಿತರಿದ್ದರು.