ಗಾಂಧಿ ಸೇವಾ ಪ್ರಶಸ್ತಿಗೆ ಎಚ್.ಎಸ್.ದೊರೆಸ್ವಾಮಿ ಆಯ್ಕೆ
Update: 2017-09-26 23:04 IST
ಬೆಂಗಳೂರು, ಸೆ. 26: ರಾಜ್ಯ ಸರಕಾರ ನೀಡುವ 2017ರ ಸಾಲಿನ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮುಖಾಂತರ ಕಳೆದ ನಾಲ್ಕು ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು, ಪ್ರಸ್ತುತ ಸಾಲಿನ ಪ್ರಶಸ್ತಿಗೆ ದೊರೆಸ್ವಾಮಿ ಅವರು ಆಯ್ಕೆಯಾಗಿದ್ದು, ಗಾಂಧಿ ಜಯಂತಿ ಅಂಗವಾಗಿ ಅ.2ರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಈ ಪ್ರಶಸ್ತಿಯು 5ಲಕ್ಷ ರೂ.ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಕರ್ನಾಟಕ’ ಪ್ರಶಸ್ತಿಗಾಗಿ ಅರ್ಹರ ಆಯ್ಕೆಗೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು ಎಂದು ಪ್ರಕಟನೆ ತಿಳಿಸಿದೆ.