ಮದ್ಯಮುಕ್ತ ಚುನಾವಣೆಗೆ ಪಕ್ಷಾತೀತ ಬೆಂಬಲ ಅಗತ್ಯ: ಸಚಿವ ರೈ
ಬಂಟ್ವಾಳ, ಅ. 8: ಮದ್ಯಮುಕ್ತ ಚುನಾವಣೆಗೆ ಪಕ್ಷಾತೀತ ಬೆಂಬಲ ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಬಂಟ್ವಾಳ ತಾಲೂಕು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜನಜಾಗೃತಿ ವೇದಿಕೆ, ಪ್ರಗತಿಬಂಧು,ಸ್ವಸಹಾಯ ಸಂಘಗಳ ಒಕ್ಕೂಟ, ನಂದಾವರ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರ, ರೋಟರಿ ಕ್ಲಬ್ ಬಂಟ್ವಾಳ ಆಶ್ರಯದಲ್ಲಿ ಗಾಂಧೀ ಜಯಂತಿ ಪ್ರಯುಕ್ತ ರವಿವಾರ ನಂದಾವರದಲ್ಲಿ ನಡೆದ ತಾಲೂಕು ಮಟ್ಟದ ನವಜೀವನ ಸಮಿತಿ ಸದಸ್ಯರ ಸಮಾವೇಶ ಮತ್ತು ಮದ್ಯವರ್ಜಿತರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭ ಸಮಿತಿ ಸಚಿವರಿಗೆ ಪಾನ ನಿಷೇಧ ಕುರಿತು ನೀಡಿದ ಮನವಿಗೆ ಸ್ಪಂದಿಸಿದ ಅವರು, ಮನವಿಯನ್ನು ಸರಕಾರದ ಗಮನಕ್ಕೆ ತರುತ್ತೇನೆ. ದೇಶಾದ್ಯಂತ ಪಾನಮುಕ್ತರಾಗಿ ಜನರು ಜೀವಿಸಬೇಕು. ಮದ್ಯಮುಕ್ತ ಚುನಾವಣೆಗೆ ನನ್ನ ಸಹಮತವಿದೆ ಎಂದು ಹೇಳಿದರು.
ಡಾ. ವೀರೇಂದ್ರ ಹೆಗ್ಗಡೆ ನಡೆಸುವ ಕಾರ್ಯಕ್ರಮ ನಮ್ಮೆಲ್ಲರ ಸ್ಫೂರ್ತಿಯಾಗಿದ್ದು, ಎಲ್ಲ ಜಾತಿ, ಮತ, ಧರ್ಮದವರನ್ನು ಕೈಬೀಸಿ ಕರೆಯುತ್ತಿದೆ ಎಂದು ಹೇಳಿದರು. ಆಶೀರ್ವಚನ ನೀಡಿದ ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂತ ಸ್ವಾಮೀಜಿ ಮದ್ಯಪಾನ ಮಾಡದೇ ಇರುವ ನವಜೀವನ ಸಮಿತಿ ಸದಸ್ಯರಿಗೆ ಶುಭ ಹಾರೈಸಿದರು. ಬಂಟ್ವಾಳ ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರಕಾಶ ಕಾರಂತ ಅಧ್ಯಕ್ಷತೆ ವಹಿಸಿ, ವೇದಿಕೆಯ ಹಕ್ಕೊತ್ತಾಯಗಳನ್ನು ಮಂಡಿಸಿದರು. ಸಂಪನ್ಮೂಲ ವ್ಯಕ್ತಿ ವಿವೇಕ್ ವಿನ್ಸೆಂಟ್ ಪಾಯಿಸ್ ಮಾತನಾಡಿದರು.
ನಂದಾವರ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದ ಅಧ್ಯಕ್ಷ ಎ.ಸಿ.ಭಂಡಾರಿ, ರೋಟರಿ ಕ್ಲಬ್ ಅಧ್ಯಕ್ಷ ಸಂಜೀವ ಪೂಜಾರಿ, ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ತುಂಬೆ, ಸಜಿಪಮುನ್ನೂರು ಗ್ರಾಪಂ ಅಧ್ಯಕ್ಷ ಶರೀಫ್ ನಂದಾವರ, ರೋಟರಿ ಕಾರ್ಯದರ್ಶಿ ಕೆ.ನಾರಾಯಣ ಹೆಗ್ಡೆ, ಪ್ರಮುಖರಾದ ಕಿರಣ್ ಹೆಗ್ಡೆ, ತಾಲೂಕು ಗ್ರಾಮಾಭಿವೃದ್ಧಿ ಯೋಜನೆ ಅಧ್ಯಕ್ಷ ಸದಾನಂದ ಗೌಡ ನಾವೂರು, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಗ್ರಾಮಾಭಿವೃದ್ಧಿ ಯೋಜನೆಯ ಚಂದ್ರಶೇಖರ ನೆಲ್ಯಾಡಿ, ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಸುನೀತಾ ನಾಯಕ್ ಉಪಸ್ಥಿತರಿದ್ದರು. ಕೆಯ್ಯೂರು ನಾರಾಯಣ ಭಟ್ ಸ್ವಾಗತಿಸಿದರು. ಕೊಡಾಜೆ ಬಾಲಕೃಷ್ಣ ಆಳ್ವ ಕಾರ್ಯಕ್ರಮ ನಿರೂಪಿಸಿದರು.