×
Ad

ಬ್ರಹ್ಮಾವರ: ನ.11ರಿಂದ13 ರಾಜ್ಯ ಪ.ಪೂ. ಕಾಲೇಜು ಕ್ರೀಡಾಕೂಟ

Update: 2017-10-28 20:18 IST

ಉಡುಪಿ, ಅ.28: ಮುಂದಿನ ನ.11ರಿಂದ 13ರವರೆಗೆ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜು ಮೈದಾನದಲ್ಲಿ ನಡೆಯುವ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟವನ್ನು ಇಡೀ ರಾಜ್ಯಕ್ಕೆ ಮಾದರಿ ಯಾಗುವಂತೆ ಆಯೋಜಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಕ್ರೀಡಾಕೂಟದ ಆಯೋಜನೆ ಕುರಿತು ರಚಿಸಲಾಗಿರುವ ವಿವಿಧ ಸಮಿತಿಗಳ ಅಧ್ಯಕ್ಷರಿಗೆ ಅಪರಜಿಲ್ಲಾಧಿಕಾರಿ ಅನುರಾಧ ಸೂಚಿಸಿದ್ದಾರೆ.

ಶನಿವಾರ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ಅಥ್ಲೆಟಿಕ್ ಕೂಟ ಆಯೋಜಿಸುವ ಕುರಿತು ನಡೆದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ರಾಜ್ಯದ ಎಲ್ಲಾ 31 ಜಿಲ್ಲೆಗಳ 62 ತಂಡಗಳ ಒಟ್ಟು 2,800ಕ್ಕೂ ಅಧಿಕ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಕ್ರೀಡಾಪಟು ಗಳಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಸಮಿತಿಗಳು ತಮಗೆ ವಹಿಸಿ ರುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ಸೂಚಿಸಿದ ಅಪರ ಜಿಲ್ಲಾಧಿಕಾರಿ, ಕ್ರೀಡಾಕೂಟದ ಆಯೋಜನೆಗೆ ಸಂಬಂಧಿಸಿ ನೋಡಲ್ ಅಧಿಕಾರಿಯೊಬ್ಬರನ್ನು ನೇಮಿಸುವಂತೆ ತಿಳಿಸಿದರು.

ಕ್ರೀಡಾಕೂಟಕ್ಕೆ ಸೂಕ್ತ ಪೊಲೀಸ್ ಭದ್ರತೆ, ಕ್ರೀಡಾಪಟುಗಳಿಗೆ ವಸತಿ ಸೌಲ್ಯ, ಆಹಾರ ಹಾಗೂ ಸಾರಿಗೆ ಸೌಲಭ್ಯ ಒದಗಿಸುವಂತೆ ಸಲಹೆ ನೀಡಿದರು. ಕ್ರೀಡಾಕೂಟಕ್ಕೆ ಅಗತ್ಯವಿರುವ ಕ್ರೀಡಾ ಉಪಕರಣಗಳನ್ನು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪಡೆಯುವಂತೆ ಹಾಗೂ ಕ್ರೀಡಾಂಗಣದಲ್ಲಿ ಸೂಕ್ತ ವೈದ್ಯಕೀಯ ವ್ಯವಸ್ಥೆಯನ್ನು ಒದಗಿಸುವ ಕುರಿತಂತೆ ಆರೋಗ್ಯ ಇಲಾಖೆಯ ಸಹಕಾರ ಪಡೆಯುವಂತೆ ಅನುರಾಧ ತಿಳಿಸಿದರು.

ಕ್ರೀಡಾಕೂಟ ಆಯೋಜನೆ ಕುರಿತಂತೆ ಆಮಂತ್ರಣ ಪತ್ರಿಕೆ ಮುದ್ರಣದ ವೇಳೆ ಶಿಷ್ಟಾಚಾರ ವ್ಯವಸ್ಥೆಯಲ್ಲಿ ಲೋಪ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಈ ಹಿಂದೆ ಆಯೋಜಿಸಿದ ಎಲ್ಲಾ ಕ್ರೀಡಾಕೂಟಗಳು ಯಾವುದೇ ಲೋಪಗಳಿಲ್ಲದಂತೆ ಯಶಸ್ವಿಯಾಗಿದ್ದು, ಈ ಕ್ರೀಡಾಕೂಟವೂ ಸಹ ಯಾವುದೇ ಲೋಪವಿಲ್ಲದೇ ಅತ್ಯಂತ ಯಶಸ್ವಿಯಾಗಿ ಆಯೋಜನೆ ಮಾಡಲು ಎಲ್ಲರೂ ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಅನುರಾಧ ಕಿವಿಮಾತು ಹೇಳಿದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ವಿಜಯಲಕ್ಷ್ಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಸರಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ನಿಂಗಯ್ಯ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜೋಶಿ, ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಮಧುರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಅಧಿಕಾರಿ ಮಧುಕರ್, ಒಎಸ್ ಎಜುಕೇಶನ್ ಟ್ರಸ್ಟ್‌ನ ಸಂಚಾಲಕರು ಹಾಗೂ ಧರ್ಮಗುರುಗಳಾದ ವಂ. ಸಿ.ಎ ಐಸಾಕ್, ಕಾರ್ಯದರ್ಶಿ ಅಲನ್ ರೋಹನ್ ವಾಸ್, ಸಿಬಿಎಸ್‌ಸಿ ವಿಭಾಗದ ಕಾರ್ಯದರ್ಶಿ ಅನಿಲ್ ರೋಡ್ರಿಗಸ್, ಕಾಲೇಜು ವಿಭಾಗದ ಕಾರ್ಯದರ್ಶಿ ಮಾರ್ಟಿನ್ ಡಿಸೋಜಾ, ಗೌರವಾಧ್ಯಕ್ಷ ವಸಂತ ಶೆಟ್ಟಿ, ಪ್ರಾಂಶುಪಾಲ ಐವನ್ ಡಿ ಸುವಾರಿಸ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News