ಕನ್ನಡ ರಾಜ್ಯೋತ್ಸವ ದಿನ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದವರು ಪೊಲೀಸ್ ವಶಕ್ಕೆ
ಕಲಬುರ್ಗಿ, ನ.1: ಕನ್ನಡ ರಾಜ್ಯೋತ್ಸವ ದಿನ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ ಕೆಲವು ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡರು.
ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಬೆಳಗ್ಗೆ ಪಂಚ ಜಿಲ್ಲಾ ಕಲ್ಯಾಣ ಕರ್ನಾಟಕ ಸಂಘಟನೆ ಮತ್ತು ಹೈದರಾಬಾದ್ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ 40ಜನ ಕಾರ್ಯಕರ್ತರು ಕನ್ನಡ ರಾಜ್ಯೋತ್ಸವಕ್ಕೆ ಧಿಕ್ಕಾರ ಕೂಗಿ ಪತ್ಯೇಕ ಧ್ವಜರೋಹಣಕ್ಕೆ ಪ್ರಯತ್ನಿಸಿದರು. ಈ ವೇಳೆ ಮಧ್ಯೆ ಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸುವ ಮೂಲಕ ಪ್ರತ್ಯೇಕ ರಾಜ್ಯ ಧ್ವಜಾರೋಹಣವನ್ನು ತಡೆಯುವಲ್ಲಿ ಯಶಸ್ವಿಯಾದರು.
ಈ ವೇಳೆ ಪಂಚ ಜಿಲ್ಲಾ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಮುಖಂಡ ಎಂ.ಎಸ್.ಪಾಟೀಲ್ ಮಾತನಾಡಿ, ಕರ್ನಾಟಕ ಏಕೀಕರಣವಾಗಿದ್ದೇನೊ ಸರಿ. ಆದರೆ, ಹೈ-ಕರ್ನಾಟಕದ ಭಾಗದ ಜಿಲ್ಲೆಗಳಿಗೆ ಮೂಲಭೂತ ಸೌಲಭ್ಯಗಳು ಇನ್ನೂ ಮರೀಚಿಕೆಯಾಗಿಯೇ ಉಳಿದಿವೆ. ಹೀಗಾಗಿ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಡುವುದರಲ್ಲಿ ತಪ್ಪೇನು ಎಂದು ಸಮರ್ಥಿಸಿಕೊಂಡರು.