ಮಕ್ಕಳು ಸತ್ಪ್ರಜೆಗಳಾದರೆ ದೇಶದ ಭವಿಷ್ಯ ಉಜ್ವಲ: ಡಾ. ದೊಡ್ಡಮಲ್ಲಪ್ಪ

Update: 2017-11-14 12:20 GMT

ಚಿಕ್ಕಮಗಳೂರು, ನ.14: ಪೋಷಕರು ಹಾಗೂ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರಗಳನ್ನು ಕಲಿಸುವ ಮೂಲಕ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ಜಿಲ್ಲಾ ಸರ್ಜನ್ ಡಾ. ದೊಡ್ಡಮಲ್ಲಪ್ಪ ಕರೆ ನೀಡಿದ್ದಾರೆ.

ಮಂಗಳವಾರ ನಗರದ ಆಝಾದ್ ಪಾರ್ಕ್ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಏರ್ಪಡಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಈ ದೇಶದ ಸತ್ಪ್ರಜೆಗಳಾಗಿ ರೂಪುಗೊಂಡರೆ ದೇಶದ ಭವಿಷ್ಯ ಉಜ್ವಲವಾಗುತ್ತದೆ. ಯುವಜನತೆ ಉತ್ತಮ ನಾಗರಿಕರಾಗದಿದ್ದರೆ ದೇಶದ ಭವಿಷ್ಯ ಮಂಕಾಗುತ್ತದೆ ಎಂದು ಎಚ್ಚರಿಸಿದರು.

ಮಕ್ಕಳು ಶ್ರದ್ಧೆಯಿಂದ ವಿದ್ಯಾರ್ಜನೆ ಮಾಡುವುದರ ಜತೆಗೆ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರವನ್ನೂ ಮೈಗೂಡಿಸಿಕೊಳ್ಳುವ ಮೂಲಕ ಉತ್ತಮ ನಾಗರಿಕರಾಗಿ ಹೊರಹೊಮ್ಮಬೇಕು. ಅಲ್ಲದೆ, ವಿನಯ, ವಿಧೇಯತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಈ ವೇಳೆ ಮಕ್ಕಳ ದಿನಾಚರಣೆ ಅಂಗವಾಗಿ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕ ಎಸ್.ಈ.ಲೋಕೇಶ್ವರಾಚಾರ್ ಮಾತನಾಡಿದರು. ವಿದ್ಯಾರ್ಥಿ ಲೋಹಿತ್ ಅಧ್ಯಕ್ಷತೆ ವಹಿಸಿದ್ದರು, ಮುಖ್ಯಶಿಕ್ಷಕಿ ಗೀತಾ, ಶಿಕ್ಷಕರಾದ ನಾಗವೇಣಿ, ಸಾವಿತ್ರಿ, ಜಯಂತಿ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News