ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ: ಸಿಎಂ ಸಿದ್ದರಾಮಯ್ಯ

Update: 2017-11-14 14:05 GMT

ಬೆಳಗಾವಿ, ನ.14: ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರವಾಗಿದ್ದು, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದವರು ಸಹಕಾರಿ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಮಂಗಳವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ, ಸಹಕಾರ ಇಲಾಖೆ ಹಾಗೂ ಇನ್ನಿತರ ಸಂಘ, ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 64ನೆ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ಸಹಕಾರ ಕ್ಷೇತ್ರಕ್ಕೆ 113 ವರ್ಷಗಳ ಇತಿಹಾಸವಿದ್ದು, ರಾಜ್ಯದಲ್ಲಿ ಇಂದು ಸಹಕಾರ ಕ್ಷೇತ್ರ ಉತ್ತಮವಾಗಿ ಬೆಳವಣಿಗೆ ಹೊಂದಿದೆ. ಸಹಕಾರ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ನೆಹರೂ ಅವರ ಕೊಡುಗೆ ಅಪಾರವಾಗಿದೆ. ಮಹಾತ್ಮ ಗಾಂಧೀಜಿ ಅವರು ದೇಶ ಹಾಗೂ ಜನರ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಅಗತ್ಯವೆಂದು ಹೇಳಿದ್ದರು ಎಂದ ಅವರು, ಸಮಾಜ ಹಾಗೂ ಜನರ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಅಗತ್ಯವಾಗಿದ್ದು, ರಾಜ್ಯ ಸರಕಾರವು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಸದಾ ಬದ್ಧ ಎಂದು ಭರವಸೆ ನೀಡಿದರು.

ಸಹಕಾರ ಸಂಘಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನಾಗಿ ಮಾಡಿಕೊಳ್ಳಬೇಕೆಂದು ಸರಕಾರದಿಂದ ಆದೇಶಿಸಲಾಗಿತ್ತು. ಅದರಂತೆ ಪ್ರಸ್ತುತ ಪ.ಜಾತಿ ಮತ್ತು ಪ.ಪಂಗಡದ 11 ಲಕ್ಷ ಮಂದಿ ಸಹಕಾರಿ ಸಂಘಗಳಲ್ಲಿ ಸದಸ್ಯತ್ವ ಹೊಂದಿದ್ದಾರೆ. ಜತೆಗೆ ಈ ಸದಸ್ಯರಿಗಾಗಿ ಸರಕಾರದಿಂದ ಸಹಕಾರಿ ಸಂಸ್ಥೆಗಳಿಗೆ 49 ಕೋಟಿ ರೂ.ನೀಡಲಾಗಿದೆ ಎಂದು ಹೇಳಿದರು.

ರಾಜ್ಯ ಸರಕಾರದಿಂದ ಮಹಿಳಾ ಸಹಕಾರಿ ಸಂಘಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಪ್ರಸ್ತುತ ಮಹಿಳಾ ಸಹಕಾರಿ ಸಂಘದ ಸದಸ್ಯರಿಗೆ ಶೇ.4 ರಷ್ಟು ಬಡ್ಡಿದರದಲ್ಲಿ ಸಾಲಸೌಲಭ್ಯ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯ ಒದಗಿಸಲು ಚಿಂತನೆ ನಡೆಸಲಾಗುತ್ತಿದೆ. ಇದನ್ನು ಶೀಘ್ರ ಜಾರಿಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ರೈತರ ಸಾಲಮನ್ನಾ ಘೋಷಿಸಿದ ನಂತರ ಎಲ್ಲ ಸಹಕಾರಿ ಬ್ಯಾಂಕ್‍ಗಳಿಗೆ ಅಗತ್ಯ ಹಣ ನೀಡಲಾಗಿದೆ. ಈಗ ಚಳಿಗಾಲದ ಅಧಿವೇಶನದಲ್ಲಿ ಇನ್ನೊಂದು ಕಂತಿನಲ್ಲಿ ಸಹಕಾರಿ ಬ್ಯಾಂಕಗಳಿಗೆ 3 ಸಾವಿರ ಕೋಟಿ ರೂ.ಗಳನ್ನು ನೀಡಲಾಗುವುದು. ನಮ್ಮ ಸರಕಾರ ಅಧಿಕಾರಕ್ಕೆ ಬರುವ ಮುಂಚೆ ಪ್ರತಿವರ್ಷ 16 ಲಕ್ಷ ರೈತರು ಸಾಲಸೌಲಭ್ಯ ಪಡೆಯುತ್ತಿದ್ದರು. ಆದರೆ ನಮ್ಮ ಸರಕಾರದ ಅವಧಿಯಲ್ಲಿ ಪ್ರತಿವರ್ಷ 23 ಲಕ್ಷ ರೈತರಿಗೆ ಸಾಲಸೌಲಭ್ಯ ಒದಗಿಸಲಾಗುತ್ತಿದೆ. ಜತೆಗೆ ನಮ್ಮ ಸರಕಾರದ ಅವಧಿಯಲ್ಲಿ ಮೂರು ಬಾರಿ ನೇಕಾರರ ಸಾಲವನ್ನು ಮನ್ನಾ ಮಾಡಲಾಗಿದೆ ಎಂದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ರಾಜ್ಯ ಸರಕಾರ ಕಳೆದ ನಾಲ್ಕುವರೆ ವರ್ಷಗಳಿಂದ ಸಹಕಾರಿ ಕ್ಷೇತ್ರಕ್ಕೆ ಹೆಚ್ಚಿನ ಮನ್ನಣೆ ನೀಡಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಾ ಬಂದಿದೆ. ರೈತರ ಶ್ರೇಯೋಭಿವೃದ್ಧಿಗೂ ಸರಕಾರ ಬದ್ಧವಾಗಿದೆ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ರಾಜ್ಯದ ಎಲ್ಲ ಸಹಕಾರಿ ಸಂಘಗಳಲ್ಲಿ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದವರನ್ನು ಸದಸ್ಯರನ್ನಾಗಿ ನೇಮಿಸಿಕೊಳ್ಳುವಂತೆ ಸರಕಾರದಿಂದ ಸೂಚಿಸಲಾಗಿದೆ. ಸಣ್ಣ ಕೈಗಾರಿಕೆಗಳು ಇಂದು ಅಳಿವಿನ ಅಂಚಿಗೆ ಸರಿಯುತ್ತಿದ್ದು, ಸಣ್ಣ ಕೈಗಾರಿಕೆಗಳ ಬೆಳವಣಿಗೆಗೆ ಸರಕಾರದಿಂದ ಹೊಸ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ರಾಜ್ಯ ಸರಕಾರದಿಂದ ಸಹಕಾರ ಸಮ್ಮೇಳನ ನಡೆಸುವ ಕುರಿತು ಚರ್ಚಿಸಲಾಗಿದ್ದು, ಕಾರ್ಯಕ್ಕಮಕ್ಕಾಗಿ ಸ್ಥಳವನ್ನು ಗುರುತಿಸಲಾಗಿದೆ. ಮೈಸೂರಿನಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.

ಶಾಸಕ ಕೆ.ರಾಜಣ್ಣ ಮಾತನಾಡಿ, ರಾಜ್ಯ ಸರಕಾರದಿಂದ ಹಮ್ಮಿಕೊಳ್ಳುವ ಕಾರ್ಯಕ್ರಮಗಳಿಗಾಗಿ ಮೀಸಲಿಡುವ ಹಣವನ್ನು ಸರಕಾರ ಕೇವಲ ರಾಜ್ಯಮಟ್ಟದ ಸಹಕಾರಿ ಬ್ಯಾಂಕುಗಳಲ್ಲಿ ಮಾತ್ರ ಠೇವಣಿ ಇಡುತ್ತಿದೆ. ಇದರಿಂದ ಜಿಲ್ಲಾ ಸಹಕಾರಿ ಬ್ಯಾಂಕುಗಳು ಹಿಂದುಳಿಯುತ್ತಿವೆ.ಆದ್ದರಿಂದ ರಾಜ್ಯ ಸರಕಾರದಿಂದ ಆಯೋಜಿಸುವ ಕಾರ್ಯಕ್ರಮಗಳಿಗಾಗಿ ಮೀಸಲಿಡುವ ಹಣವನ್ನು ಜಿಲ್ಲಾ ಬ್ಯಾಂಕುಗಳಲ್ಲೂ ಠೇವಣಿ ಇಡಬೇಕು. ಸಹಕಾರಿ ಕ್ಷೇತ್ರದ ಸಾಧಕರನ್ನು ಸರಕಾರದಿಂದ ಗುರುತಿಸಿ, ಪ್ರೋತ್ಸಾಹಿಸಬೇಕು ಎಂದು ಅವರು ಮನವಿ ಮಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಕರ್ನಾಟಕ ಎರಡನೆ ಸ್ಥಾನದಲ್ಲಿದ್ದು, ಉತ್ತಮ ಅಭಿವೃದ್ಧಿ ಸಾಧಿಸಿದೆ. ಮುಂಬರುವ ಬಜೆಟ್‍ನಲ್ಲಿ ಸರಕಾರ ಸಹಕಾರ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದ ಅವರು, ಮುಂಬರುವ ದಿನಗಳಲ್ಲಿ ಪ್ರತಿಯೊಂದು ಗ್ರಾಮಗಳಲ್ಲಿಯೂ ಸಹಕಾರ ಸಂಘವನ್ನು ಸ್ಥಾಪಿಸಲಾಗುವುದು ಹಾಗೂ ರಾಜ್ಯದ ಎಲ್ಲ ಸಹಕಾರ ಸಂಘಗಳಿಗೂ ಸ್ವಂತ ಕಟ್ಟಡ ನಿರ್ಮಿಸಿಕೊಡಲಾಗುವುದು ಎಂದು ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಕಾರ ಧ್ವಜಾರೋಹಣ ನೆರವೇರಿಸಿ, ವಸ್ತು ಪ್ರದರ್ಶನ ಮತ್ತು ಮಳಿಗೆಗಳ ಉದ್ಘಾಟನೆ ಮಾಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಎಚ್.ಕೆ.ಪಾಟೀಲ್ ಸಹಕಾರ ಪತ್ರಿಕೆಯ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕಂದಾಯ ಸಚಿವರ ಸಂಸದಿಯ ಕಾರ್ಯದರ್ಶಿ ಗಣೇಶ ಹುಕ್ಕೇರಿ, ಶಾಸಕರಾದ ಶಿವಾನಂದ ಪಾಟೀಲ್, ಅರವಿಂದ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ವಿವೇಕರಾವ್ ಪಾಟೀಲ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ಐಹೊಳೆ, ಸಹಕಾರ ಇಲಾಖೆಯ ಕಾರ್ಯದರ್ಶಿ ಪಿ.ಹೇಮಲತಾ, ಜಿಲ್ಲಾಧಿಕಾರಿ ಝಿಯಾವುಲ್ಲಾ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.

'ಸಹಕಾರ ರತ್ನ ಪ್ರಶಸ್ತಿ' ಪ್ರದಾನ: ಸಹಕಾರ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ರಾಜ್ಯದ ಎಂಟು ಸಾಧಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 2017ನೆ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿದರು. ಬೆಂಗಳೂರು ನಗರ ವಿಭಾಗದಿಂದ ಪಾತಿಮಾ ಕ್ರಿಶ್ಟಿನಾ ಲಾರೆನ್ಸ್ ಮತ್ತು ಬಾಬುರೆಡ್ಡಿ, ಬೆಂಗಳೂರು ಗ್ರಾಮೀಣ ವಿಭಾಗದಿಂದ ಕೆ.ಎಸ್.ಸುಧಾಕರ, ಮೈಸೂರು ವಿಭಾಗದಿಂದ ಕೆ.ಲಿಂಗೇಗೌಡ ಪಾಪಣ್ಣ, ಬೆಳಗಾವಿ ವಿಭಾಗದಿಂದ ಸುಭಾಶ.ಎಸ್.ಜೋಶಿ, ಕಲಬುರಗಿ ವಿಭಾಗದಿಂದ ಎ.ರಾಜಶೇಖರ ನಾಯಕ ಮತ್ತು ಎಸ್.ಬಿ.ರೆಡ್ಡಿ ಹಾಗೂ ನಿವೃತ್ತ ನೌಕರರ ವಿಭಾಗದಿಂದ ಸಹಕಾರ ಸಂಘಗಳ ನಿವೃತ್ತ ಅಪರ ನಿಬಂಧಕ ಕಮಲೇಕರ ಶಿವಾಜಿ ಅವರಿಗೆ ಇದೇ ವೇಳೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
                                                  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News