ಬೆಳಗಾವಿ ಅಧಿವೇಶನ: ಧರಣಿ ಕೈಬಿಟ್ಟ ಬಿಜೆಪಿ ಸದಸ್ಯರು
ಬೆಳಗಾವಿ, ನ.15: ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಕಳೆದ ಎರಡೂ ದಿನದಿಂದ ವಿಧಾನಸಭೆಯಲ್ಲಿ ಧರಣಿ ಸತ್ಯಾಗ್ರಹ ಕೈಗೊಂಡಿದ್ದ ಬಿಜೆಪಿ ತನ್ನ ಧರಣಿ ಹಿಂಪಡೆದಿದೆ.
ಬುಧವಾರ ವಿಧಾನಸಭೆಯ ಕಲಾಪ ಬೆಳಗ್ಗೆ 10:30ರ ಸುಮಾರಿಗೆ ಸದನ ಸಮಾವೇಶಗೊಂಡಾಗ ಬಿಜೆಪಿ ಸದಸ್ಯರು ಸ್ಪೀಕರ್ ಪೀಠದ ಮುಂದಿನ ಬಾವಿಗಿಳಿದು ಧರಣಿ ಸತ್ಯಾಗ್ರಹ ಮುಂದುವರಿಸಿದರು. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ವಾಗ್ವಾದ ನಡೆದು ಕೆಲಕಾಲ ಗದ್ದಲವೂ ಉಂಟಾಯಿತು.
ಈ ವೇಳೆ ಮಧ್ಯೆ ಪ್ರವೇಶಿಸಿದ ಸ್ಪೀಕರ್ ಕೋಳಿವಾಡ, ನಿಲುವಳಿ ಸೂಚನೆ ಈಗಾಗಲೇ ತಿರಸ್ಕಾರವಾಗಿರುವುದರಿಂದ ಬೇರೆ ರೂಪದಲ್ಲಿ ನೋಟಿಸ್ ಕೊಟ್ಟರೆ ಚರ್ಚೆಗೆ ಅವಕಾಶ ಕೊಡುವ ಭರವಸೆ ನೀಡಿದರು.
ಅದಕ್ಕೆ ಸಮ್ಮತಿಸಿದ ಬಿಜೆಪಿ ಸದಸ್ಯರು ಧರಣಿ ಕೈಬಿಟ್ಟು ತಮ್ಮ ಸ್ವಸ್ಥಾನಕ್ಕೆ ತೆರಳಿದರು. ಆನಂತರ ಸ್ಪೀಕರ್ ಕೋಳಿವಾಡ ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಂಡರು.
ಇದಕ್ಕೂ ಮುನ್ನ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮಾತನಾಡಿ, ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದೆ. ಸಿಬಿಐ ತನಿಖೆ ನಡೆಸುತ್ತಿದೆ. ನಿನ್ನೆ ಗಣಪತಿ ತಂಗಿದ್ದ ಮಡಿಕೇರಿ ಲಾಡ್ಜ್ನಲ್ಲಿ ಗುಂಡು ಪತ್ತೆಯಾಗಿದೆ. ಈ ವಿಚಾರಗಳ ಬಗ್ಗೆ ಹೆಚ್ಚು ಬೆಳಕು ಚೆಲ್ಲಬೇಕಾಗಿದೆ. ಚರ್ಚೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಕೋರಿದರು.
ಸದನದ ಕಾರ್ಯಕಲಾಪಗಳಿಗೆ ಅಡ್ಡಿಪಡಿಸಬೇಕೆಂಬುದು ನಮ್ಮ ಉದ್ದೇಶವಲ್ಲ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು, ಕಳಸಾ-ಬಂಡೂರಿ ವಿಚಾರ, ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕಾದ ಅಗತ್ಯವಿದೆ. ಗಣಪತಿ ಆತ್ಮಹತ್ಯೆ ಬಗ್ಗೆ ಹೆಚ್ಚಿನ ಚರ್ಚೆ ನಡೆಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.
ಬೇರೆ ರೂಪದಲ್ಲಿ ಚರ್ಚೆಗೆ ಅವಕಾಶ ಮಾಡಿಕೊಡುವುದು ಎಂದು ಸ್ಪೀಕರ್ ಭರವಸೆ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ತಮ್ಮ ಧರಣಿ ಹಿಂಪಡೆದರು.