ಕೇಂದ್ರ ಸರಕಾರ ಹಠ ಬಿಡದಿದ್ದಲ್ಲಿ ಮುಂದಿನ ದಿನಗಳಲ್ಲಿ ವಿದ್ಯುತ್ ಅಭಾವ: ಡಿ.ಕೆ.ಶಿವಕುಮಾರ್

Update: 2017-11-18 17:35 GMT

ಬೆಂಗಳೂರು, ನ.18: ಕೇಂದ್ರ ಸರಕಾರ ದಿನದ ವಿದ್ಯುತ್ ಉತ್ಪಾದನೆಗೆ ಬಳಕೆಯಾಗುವಷ್ಟು ಮಾತ್ರ ಕಲ್ಲಿದ್ದಲನ್ನು ಪೂರೈಸುತ್ತಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ವಿದ್ಯುತ್ ಅಭಾವ ಎದುರಾಗುವ ಸಾಧ್ಯತೆಗಳಿವೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದಿನ ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಾಸವಾದರೂ ಉತ್ಪಾದನೆ ಸ್ಥಗಿತಗೊಳ್ಳಲಿದೆ. ಇದರಿಂದಾಗಿ ವಿದ್ಯುತ್ ಅಭಾವ ಎದುರಾಗಲಿದೆ ಎಂದರು.

ಆಯಾ ದಿನಕ್ಕೆ ಸಾಕಾಗುವಷ್ಟು ಕಲ್ಲಿದ್ದಲು ಪೂರೈಸುವ ಬದಲು ಹೆಚ್ಚುವರಿಯಾಗಿ ಕಲ್ಲಿದ್ದಲು ನೀಡಬೇಕೆಂದು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುತ್ತಿದ್ದೇವೆ. ಆದರೆ ಕೇಂದ್ರ ಸರಕಾರ ರೈಲಿನಲ್ಲಿ ಹೊರತುಪಡಿಸಿ ಬೇರೆ ಯಾವ ಸಾರಿಗೆ ಮಾರ್ಗದಿಂದಲೂ ಕಲ್ಲಿದ್ದಲು ಕಳುಹಿಸುವುದಿಲ್ಲ ಎಂಬ ಹಠಕ್ಕೆ ಬಿದ್ದಿದೆ. ಕಲ್ಲಿದ್ದಲು ಸಂಬಂಧ ಕೆಲವು ಕಾನೂನು ವ್ಯಾಜ್ಯಗಳು ನಡೆಯುತ್ತಿದ್ದು, ರಾಜ್ಯ ಸರಕಾರಕ್ಕೆ ಶೋಕಾಸ್ ನೋಟಿಸ್ ಕೂಡ ಬಂದಿದೆ. ನ್ಯಾಯಾಲಯ ಸರದಿಯ ಮೇಲೆ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿ ಹೇಳುತ್ತಿದೆ. ಬೇಸಿಗೆ ಸಮೀಪಿಸುತ್ತಿರುವುದರಿಂದ ನಮಗೆ ಪ್ರಕರಣ ತುರ್ತಾಗಿ ಇತ್ಯರ್ಥಗೊಳ್ಳಬೇಕು. ಹೆಚ್ಚುವರಿ ಕಲ್ಲಿದ್ದಲು ಪೂರೈಕೆಯಾಗಬೇಕು. ಹೀಗಾಗಿ ಆದ್ಯತೆ ಮೇರೆಗೆ ನಮ್ಮ ಪ್ರಕರಣವನ್ನು ಕೈಗೆತ್ತಿಕೊಳ್ಳುವಂತೆ ವಕೀಲರ ಮೂಲಕ ಕೋರ್ಟ್‌ಗೆ ಮನವಿ ಮಾಡುವ ಸಂಬಂಧವೂ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದರು.

ಈಗಾಗಲೇ ಮಳೆಗಾಲ ಮುಗಿಯುತ್ತಿದ್ದು, ಬಿಸಿಲಿನ ತಾಪ ಹೆಚ್ಚಾಗಿದೆ. ವಿದ್ಯುತ್ ಬೇಡಿಕೆ ತೀವ್ರಗೊಳ್ಳುತ್ತಿದೆ. ಜಲಾಶಯಗಳಲ್ಲಿ ನೀರಿನ ಮಟ್ಟವು ಕಡಿಮೆಯಾಗುತ್ತಿರುವುದರಿಂದ ನಮಗೆ ಉಷ್ಣ ವಿದ್ಯುತ್ ಉತ್ಪಾದನೆಯೇ ಪ್ರಮುಖ ಆಧಾರ. ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯವಾದರೆ ಉತ್ಪಾದನೆ ಕಡಿತಗೊಳ್ಳುತ್ತದೆ. ಅನಿವಾರ್ಯವಾಗಿ ಲೋಡ್ ಶೆಡ್ಡಿಂಗ್ ಜಾರಿಗೊಳಿಸಬೇಕಾಗುತ್ತದೆ ಎಂದರು.

ಸಭೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಆ, ರಾಜ್ಯದ ಅಡ್ವೋಕೇಟ್ ಜನರಲ್(ಎಜಿ) ಮತ್ತಿತರರು ಭಾಗವಹಿಸಿದ್ದರು.

ಮಾರ್ಚ್, ಎಪ್ರಿಲ್ ತಿಂಗಳಲ್ಲಿ ಬಿರು ಬೇಸಿಗೆ ಇದ್ದು, ಅದೇ ಸಮಯದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯುತ್ತದೆ. ಅಂತಹ ಕಾಲದಲ್ಲಿ ಲೋಡ್ ಶೆಡ್ಡಿಂಗ್ ಜಾರಿಯಾದರೆ ಜನ ಸರಕಾರಕ್ಕೆ ಹಿಡಿಶಾಪ ಹಾಕುತ್ತಾರೆ. ಚುನಾವಣೆ ಮೇಲೆ ಪರಿಣಾಮ ಬೀರಿ ಪಕ್ಷಕ್ಕೆ ಹಾನಿಯಾಗುವ ಆತಂಕವಿದೆ ಎಂದು ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಮುಖ್ಯಮಂತ್ರಿ ಬಳಿ ಆತಂಕ ತೋರಿಕೊಂಡಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಕಲ್ಲಿದ್ದಲು ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಅದಕ್ಕಾಗಿ ಕೇಂದ್ರದ ಕಲ್ಲಿದ್ದಲು ಸಚಿವರಿಗೆ ಪತ್ರ ಬರೆಯುವಂತೆಯೂ ಮುಖ್ಯಮಂತ್ರಿಯವರಿಗೆ ಡಿಕೆಶಿ ಮನವಿ ಮಾಡಿದ್ದಾರೆ. ಅನಿವಾರ್ಯ ಸಂದರ್ಭದಲ್ಲಿ ವಿದ್ಯುತ್ ಖರೀದಿ ಮಾಡಬೇಕಾಗುತ್ತದೆ. ಅದು ಸರಕಾರದ ಬೊಕ್ಕಸಕ್ಕೆ ಹೊರೆಯಾಗುವ ಸಾಧ್ಯತೆಗಳಿವೆ. ಇಂತಹ ಸಂದರ್ಭಗಳಲ್ಲಿ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

'ಲೋಡ್ ಶೆಡ್ಡಿಂಗ್ ಜಾರಿಯಾಗಬಹುದು'
ಈಗಾಗಲೇ ಮಳೆಗಾಲ ಮುಗಿಯುತ್ತಿದ್ದು, ಬಿಸಿಲಿನ ತಾಪ ಹೆಚ್ಚಾಗಿದೆ. ವಿದ್ಯುತ್ ಬೇಡಿಕೆ ತೀವ್ರಗೊಳ್ಳುತ್ತಿದೆ. ಜಲಾಶಯಗಳಲ್ಲಿ ನೀರಿನ ಮಟ್ಟವು ಕಡಿಮೆಯಾಗುತ್ತಿರುವುದರಿಂದ ನಮಗೆ ಉಷ್ಣ ವಿದ್ಯುತ್ ಉತ್ಪಾದನೆಯೇ ಪ್ರಮುಖ ಆಧಾರ. ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯವಾದರೆ ಉತ್ಪಾದನೆ ಕಡಿತಗೊಳ್ಳುತ್ತದೆ. ಅನಿವಾರ್ಯವಾಗಿ ಲೋಡ್ ಶೆಡ್ಡಿಂಗ್ ಜಾರಿಗೊಳಿಸಬೇಕಾಗುತ್ತದೆ.
-ಡಿ.ಕೆ.ಶಿವಕುಮಾರ್, ಇಂಧನ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News