ಜನವರಿವಳಗೆ ಆರು ಸಾವಿರ ಪೌರ ಕಾರ್ಮಿಕರ ಖಾಯಂ: ಸಚಿವ ಈಶ್ವರ್ ಖಂಡ್ರೆ
Update: 2017-11-21 20:22 IST
ಬೆಳಗಾವಿ, ನ. 21: 2018ರ ಜನವರಿವಳಗೆ ಆರು ಸಾವಿರ ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ, ಸ್ಥಳೀಯ ಸಂಸ್ಥೆಗಳ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ.
ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಶಾಸಕ ಎಚ್.ಎಸ್.ಶಿವಶಂಕರ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರ ಹುದ್ದೆಗಳನ್ನು ಖಾಯಂಗೊಳಿಸಲಾಗುವುದು. ದಿನಗೂಲಿ, ಗುತ್ತಿಗೆ, ಸಮಾಜ ಕೆಲಸಕ್ಕೆ ಸಮಾನ ವೇತನ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಪೌರ ಕಾರ್ಮಿಕರ ನೇಮಕಾತಿಗೆ ಆದ್ಯತೆ ನೀಡಲಾಗುವುದು ಎಂದರು.
ಏಳು ನೂರು ಜನರಿಗೆ ಒಬ್ಬ ಪೌರ ಕಾರ್ಮಿಕರಂತೆ ನೇಮಕಾತಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಕೆಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅದನ್ನು ಉಲ್ಲಂಘಿಸಿ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಅವಕಾಶವಿಲ್ಲ. ಈ ಸಂಬಂಧ ಈಗಾಗಲೇ 2017ರ ಅಗಸ್ಟ್ 7ರಂದು ಅಧಿಸೂಚನೆ ಹೊರಡಿಸಲಾಗಿದೆ ಎಂದು ಅವರು ವಿವರಣೆ ನೀಡಿದರು.