ಮೈಸೂರು: ನ.24 ರಿಂದ 83ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Update: 2017-11-21 17:12 GMT

ಮೈಸೂರು, ನ.21: ಕನ್ನಡ ನುಡಿ, ಸಾಹಿತ್ಯದ ಹಬ್ಬಕ್ಕೆ ಸಿರಿಗಂಧದ ಮೈಸೂರು ಅಣಿಯಾಗುತ್ತಿದೆ. ನ.24ರಿಂದ 26ರವರೆಗೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ 83ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಚಾಲನೆ ನೀಡಲಿದ್ದಾರೆ.

ಜಿಲ್ಲಾ ಪತ್ರಕರ್ತ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಸಮಗ್ರ ಮಾಹಿತಿ ನೀಡಿದರು.

ಸಮ್ಮೇಳನಕ್ಕೆ ಭರದ ಸಿದ್ಧತೆ ನಡೆದಿದ್ದು, ನ.24ರಂದು ಬೆಳಗ್ಗೆ 8.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿದೆ. ರಾಷ್ಟ್ರಧ್ವಜ, ಪರಿಷತ್ತಿನ ಧ್ವಜಾರೋಹಣವನ್ನು ಕ್ರಮವಾಗಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಅಧ್ಯಕ್ಷ ಡಾ.ಮನು ಬಳಿಗಾರ್ ನೆರವೇರಿಸುವರು. ನಾಡಧ್ವಜಾರೋಹಣವನ್ನು ತಾವು(ರಾಜಣ್ಣ) ನೆರವೇರಿಸುವುದಾಗಿ ಹೇಳಿದರು.

ಅಂದು ಬೆಳಗ್ಗೆ 9ಕ್ಕೆ ನಗರದಲ್ಲಿ ನಡೆಯಲಿರುವ ಸಮ್ಮೇಳನಾಧ್ಯಕ್ಷ ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಅವರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಯಿಮಾ ಸುಲ್ತಾನ್ ನಝೀರ್ ಅಹ್ಮದ್ ಚಾಲನೆ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರ ಡಿ.ರಂದೀಪ್ ಮತ್ತಿತರ ಅಧಿಕಾರಿಗಳು, ವಿವಿಧ ಜನಪ್ರತಿನಿಧಿಗಳು, ನಿಗಮ, ಮಂಡಳಿಗಳ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ ಎಂದರು.

ಮೆರವಣಿಗೆ ಮಾರ್ಗ: ಮೆರವಣಿಗೆಯು ನಗರದ ಅರಮನೆಯ ಮುಂಭಾಗದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಆರಂಭವಾಗಿ ಅಶೋಕ ರಸ್ತೆ, ಇರ್ವಿನ್ ರಸ್ತೆ, ವಿಶ್ವೇಶ್ವರಯ್ಯ ವೃತ್ತ, ಸಯ್ಯಾಜಿರಾವ್ ರಸ್ತೆ, ಕೃಷ್ಣರಾಜ ವೃತ್ತ, ಬಸವೇಶ್ವರ ವೃತ್ತ, ಚಾಮರಾಜ ಜೋಡಿ ರಸ್ತೆ, ರಾಮಸ್ವಾಮಿ ವೃತ್ತದ ಮೂಲಕ ಮಹಾರಾಜ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಪ್ರಧಾನ ವೇದಿಕೆಗೆ ತಲುಪಲಿದೆ ಎಂದು ಹೇಳಿದರು.

ಉದ್ಘಾಟನೆ: ನಂತರ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಹಾಮಂಪಟದಲ್ಲಿ ನಿರ್ಮಿಸಿರುವ ರಾಷ್ಟ್ರಕವಿ ಕುವೆಂಪು ಪ್ರಧಾನ ವೇದಿಕೆಯಲ್ಲಿ ಸಮ್ಮೇಳನ ಪ್ರಮುಖ ಘಟ್ಟವಾದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನಕ್ಕೆ ಚಾಲನೆ ನೀಡಲಿದ್ದು, ಸಮ್ಮೇಳನಾಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ ಅಧ್ಯಕ್ಷರ ಭಾಷಣ ಮಾಡಲಿದ್ದಾರೆ. 82ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಬಂಡಾಯ ಸಾಹಿತಿ ಬರಗೂರು ರಾಮಚಂದ್ರಪ್ಪ ನಿಕಟಪೂರ್ವ ಅಧ್ಯಕ್ಷ ಭಾಷಣ ಮಾಡಲಿದ್ದಾರೆ. ಇದಲ್ಲದೆ, ಡಾ.ಎಚ್.ಸಿ.ಮಹದೇವಪ್ಪ ಸ್ವಾಗತಿಸಲಿದ್ದು, ಸಚಿವರಾದ ಉಮಾಶ್ರೀ, ತನ್ವೀರ್ ಸೇಠ್, ಡಾ.ಎಂ.ಸಿ.ಮೋಹನಕುಮಾರಿ ಅವರು ಕ್ರಮವಾಗಿ ಸಾಂಸ್ಕøತಿಕ ಕಾರ್ಯಕ್ರಮಗಳು, ಪುಸ್ತಕ ಮಳಿಗೆಗಳ ಉದ್ಘಾಟನೆ, ಪರಿಷತ್ತಿನ ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದವರು, ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಮ್ಮೇಳನದ ಸ್ಮರಣ ಸಂಚಿಕೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ವಿವರಿಸಿದರು.

ಸಂಸದರಾದ ಪ್ರತಾಪ ಸಿಂಹ, ಆರ್.ಧ್ರುವನಾರಾಯಣ, ಸಿ.ಎಸ್.ಪುಟ್ಟರಾಜು, ವಿಧಾನ ಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ, ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್, ಜಿ.ಟಿ.ದೇವೇಗೌಡ, ಕೆ.ವೆಂಕಟೇಶ್, ಎಚ್.ಪಿ.ಮಂಜುನಾಥ್, ಸಾ.ರಾ.ಮಹೇಶ್, ಮಹಾಪೌರ ಎಂ.ಜೆ.ರವಿಕುಮಾರ್, ವಿಧಾನ ಪರಿಷತ್ ಸದಸ್ಯ ಎಸ್.ನಾಗರಾಜು(ಸಂದೇಶ್ ನಾಗರಾಜು), ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಕ್ರವರ್ತಿ ಮೋಹನ್, ನಿರ್ದೇಶಕ ಎನ್.ಆರ್.ವಿಶುಕುಮಾರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಮನು ಬಳಿಗಾರ್ ಆಶಯ ಭಾಷಣ ಮಾಡಲಿದ್ದಾರೆ ಎಂದರು. 

ನ.24ರಂದು ಮಧ್ಯಾಹ್ನ ಶಿಕ್ಷಣ, ಕೃಷಿ, ದಲಿತ, ಬಂಡಾಯ, ಮಹಿಳಾಭಿವೃದ್ಧಿ, ಕನ್ನಡ ಸಾಹಿತ್ಯ ಪರಂಪರೆ, ಸಂಶೋಧನೆ ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದ ವಿವಿಧ ಗೋಷ್ಠಿಗಳು ಪ್ರಧಾನ ವೇದಿಕೆ, ಮಹಾರಾಜ ಕಾಲೇಜು ಶತಮಾನೋತ್ಸವ ಭವನ(ಸಮಾನಾಂತರ ವೇದಿಕೆ- 1) ಹಾಗೂ ಕಲಾಮಂದಿರ(ಸಮಾನಾಂತರ ವೇದಿಕೆ- 2)ಗಳಲ್ಲಿ ಆಯೋಜಿತವಾಗಿವೆ. ನ.25ರಂದು ಸಂಜೆ 4.30ಕ್ಕೆ ಪ್ರಧಾನ ವೇದಿಕೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕನ್ನಡ ನಾಡು ನುಡಿಗೆ ಅಗಣಿತ ಸೇವೆ ಸಲ್ಲಿಸಿದ ಹಿರಿಯರು, ಸಾಹಿತಿಗಳು ಸೇರಿದಂತೆ ಒಟ್ಟು 83 ಮಂದಿಯನ್ನು ಸನ್ಮಾನಿಸಲಿದ್ದಾರೆ. ಅಲ್ಲದೆ, ಎಲ್ಲಾ ವೇದಿಕೆಗಳಲ್ಲಿ ವಿಚಾರ ಗೋಷ್ಠಿಗಳು ನಡೆಯಲಿವೆ ಎಮದು ಮಾಹಿತಿ ನೀಡಿದರು.

ನ.26ರಂದು ಬೆಳಗ್ಗೆ 11ಕ್ಕೆ ಕವಿಗೋಷ್ಠಿ ಏರ್ಪಡಿಸಲಾಗಿದೆ. ಹಿರಿಯ ಸಾಹಿತಿ ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸುವರು. ಕವಿ ಡಾ.ಜಯಂತ ಕಾಯ್ಕಿಣಿ ಆಶಯ ಭಾಷಣ ಮಾಡುವರು. 26 ಮಂದಿ ಕವಿ, ಕವಯತ್ರಿಯರು ಪಾಲ್ಗೊಳ್ಳಲಿದ್ದಾರೆ. ಅಂದು ಮಧ್ಯಾಹ್ನ 2ಕ್ಕೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಂಜೆ 3.30ಕ್ಕೆ ಬಹಿರಂಗ ಅಧಿವೇಶನ ನಡೆಯಲಿದೆ ಎಂದು ನುಡಿದರು.

ನ.26ರಂದು ಸಂಜೆ 4.15ಕ್ಕೆ ನಡೆಯಲಿರುವ ಸಮಾರೋಪ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಡಾ.ಎಚ್.ಎಸ್.ವೆಂಕಟೇಶ್ ಮೂರ್ತಿ ಸಮಾರೋಪ ಭಾಷಣ ಮಾಡಲಿದ್ದಾರೆ. ರಾಸಾಯನಿಕ ರಸಗೊಬ್ಬರ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್, ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾರಿಗೆ ಸಚಿವ ಎಚ್.ಎಂ.ರೇವಣ್ಣ, ರಾಜ್ಯ ಸರ್ಕಾರದ ಹೊಸದಿಲ್ಲಿ ಪ್ರತಿನಿಧಿ ಅಪ್ಪಾಜಿ ಸಿ.ಎಸ್.ನಾಡಗೌಡ , ಶಾಸಕ ಕೆ.ಎನ್.ರಾಜಣ್ಣ, ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್(ಸಿಪಿಕೆ) ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

116 ಕಲಾತಂಡಗಳು: ಸಮ್ಮೇಳನ ನಡೆಯಲಿರುವ ಮೂರು ದಿನಗಳು 116 ವಿವಿಧ ಕಲಾತಂಡಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರಪಡಿಸಲಿವೆ. ಮಹಾರಾಜ ಕಾಲೇಜು ಶತಮಾನೋತ್ಸವ ಭವನ, ಕಲಾಮಂದಿರ, ಕಿರು ರಂಗಮಂದಿರ, ಪುರಭವನ ಮತ್ತು ಚಿಕ್ಕಗಡಿಯಾರದಲ್ಲಿ ಜಾನಪದ, ಭಾವಗೀತೆ, ನಾಟಕ ಹೀಗೆ ವೈವಿಧ್ಯಮಯ ಪ್ರತಿದಿನ ಸಂಜೆ 5.30ರಿಂದ ರಾತ್ರಿ 9.30ರವರೆಗೆ ಕಾರ್ಯಕ್ರಮಗಳು ನಡೆಯಲಿವೆ ಎಂದು ವಿವರಣೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಕೆ.ಎಸ್.ನಾಗರಾಜು, ಕೋಶಾಧ್ಯಕ್ಷ ರಾಜಶೇಖರ ಕದಂಬ, ಪ್ರಧಾನ ಸಂಚಾಲಕ ಮೂಗೂರು ನಂಜುಂಡಸ್ವಾಮಿ, ನಗರ ಘಟಕದ ಅಧ್ಯಕ್ಷ ಕೆ.ಎಸ್.ಶಿವರಾಮು, ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News