ನಂತೂರಿನಲ್ಲಿ ಬಸ್ಸು-ಲಾರಿ ಮುಖಾಮುಖಿ ಢಿಕ್ಕಿ: ಮಹಿಳೆ ಮೃತ್ಯು, 21 ಮಂದಿಗೆ ಗಾಯ
ಮಂಗಳೂರು, ಡಿ.7: ಬಸ್ - ಲಾರಿಗೆ ಢಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು, ಇತರ 25 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗುರುವಾರ ಬೆಳಗ್ಗೆ ನಂತೂರು ಜಂಕ್ಷನ್ನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಗುರುಪುರ ನಿವಾಸಿ ಕವಿತಾ (45) ಎಂದು ಗುರುತಿಸಲಾಗಿದೆ.
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 25 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಇದರಲ್ಲಿ ನಾಲ್ವರು ಒಳರೋಗಿಯಾಗಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಳಲಿಯಿಂದ ಸ್ಟೇಟ್ಬ್ಯಾಂಕ್ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸು ಕೆಪಿಟಿಯಿಂದ ಪಂಪ್ವೆಲ್ ಕಡೆಗೆ ಹೋಗುತ್ತಿದ್ದ ಲಾರಿ ನಡುವೆ ಢಿಕ್ಕಿ ಹೊಡೆಯಾಗಿದೆ. ಇದೇ ಸಂದರ್ಭದಲ್ಲಿ ನಿಯಂತ್ರಣವನ್ನು ಕಳೆದುಕೊಂಡ ಲಾರಿ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.
ಪರಿಣಾಮವಾಗಿ ಬಸ್ಸಿನಲ್ಲಿದ್ದ ಪ್ರಯಾಣಿಸುತ್ತಿದ್ದ ಕವಿತಾ ಅವರು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬಸ್ಸು ಚಾಲಕ ಇಮ್ರಾನ್ ಮತ್ತು ಕಾರಿನಲ್ಲಿದ್ದ ಕ್ರೈಸ್ತ ಧರ್ಮಗುರು ಸಹಿತ ನಾಲ್ವರು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತರ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಈ ಬಗ್ಗೆ ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.