×
Ad

ಮಹಿಳಾ ಉದ್ಯಮಿಗಳ ಪ್ರೋತ್ಸಾಹಕ್ಕೆ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ

Update: 2017-12-17 20:32 IST

ಕಲಬುರಗಿ, ಡಿ. 17 :  ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದೊಂದಿಗೆ ರಾಜ್ಯ ಸರ್ಕಾರ ಕಲಬುರಗಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮಹಿಳಾ ಉದ್ಯಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಿಲಾನ್ಯಾಸ ನೆರವೇರಿಸಿದರು. 

ನಗರದ ಐವಾನ್-ಎ-ಶಾಹಿ ಅತಿಥಿ ಗೃಹದ ಆವರಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಹಿಳಾ ಪಾರ್ಕ್‍ಗೆ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿಯವರು, ಇದು ಉತ್ತರ ಕರ್ನಾಟಕಕ್ಕೆ ಸರ್ಕಾರದ ಮತ್ತೊಂದು ಕೊಡುಗೆ ಎಂದು ಹೇಳಿದರು. 

ಇದು ನನ್ನ ಕನಸಿನ ಕೂಸು. ಮುಖ್ಯಮಂತ್ರಿ ಹುದ್ದೆಯ ಜೊತೆಗೆ ಕೈಗಾರಿಕೆ ಖಾತೆಯನ್ನೂ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಮಹಿಳಾ ಉದ್ಯಮಿಗಳಿಗಾಗಿ ಉದ್ಯಾನ ಸ್ಥಾಪಿಸುವ ನಿರ್ಣಯ ಕೈಗೊಳ್ಳಲಾಗಿತ್ತು ಎಂದು ತಿಳಿಸಿದರು. 

ಸರ್ಕಾರದ ಕೈಗಾರಿಕೆ ನೀತಿಯಲ್ಲಿ ಮಹಿಳಾ ಉದ್ಯಮಿಗಳಿಗಾಗಿಯೇ ಒಂದು ಅಧ್ಯಾಯವನ್ನು ಮೀಸಲಿಡಲಾಗಿದೆ. ಜೊತೆಗೆ ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಅನೇಕ ಸವಲತ್ತು ನೀಡಲಾಗಿದೆ. ಕೈಗಾರಿಕೆ ಅಭಿವೃದ್ಧಿಗೆ ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿಯೂ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಇದಲ್ಲದೆ, ರಾಮನಗರ ಜಿಲ್ಲೆಯ ಹಾರೋಹಳ್ಳಿ, ಮೈಸೂರಿನ ಹಿಮ್ಮಾವು, ಬಳ್ಳಾರಿಯ ಕುಡಿತಿನಿ, ಮಂಗಳೂರಿನ ಪಜೀರು ಹಾಗೂ ಹುಬ್ಬಳ್ಳಿಯ ಗ್ರಾಮಾಂತರ ಪ್ರದೇಶದಲ್ಲೂ ಮಹಿಳಾ ಪಾರ್ಕ್ ಸ್ಥಾಪನೆಗೆ ರೂಪುರೇಷೆ ಅಂತಿಮಗೊಳಿಸಲಾಗಿದೆ ಎಂದು ತಿಳಿಸಿದರು. ಇದರಲ್ಲಿ ಅಂದಿನ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹಾಗೂ ಹಾಲಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರ ಪಾತ್ರ ಪ್ರಮುಖವಾಗಿದೆ ಎಂದು ತಿಳಿಸಿದರು. 

ಹೈದರಾಬಾದ್-ಕರ್ನಾಟಕ ಪ್ರದೇಶದ ಅಭಿವೃದ್ಧಿ ಹಿನ್ನೆಲೆಯಲ್ಲಿ ಮಹಿಳಾ ಉದ್ಯಮಗಳನ್ನು ಅಭಿವೃದ್ಧಿಪಡಿಸಲು, ಭಾವಿ ಉದ್ಯಮಿಗಳನ್ನು ಪ್ರೋತ್ಸಾಹಿಸಲು ನಂದೂರು ಕೆಸರಟಗಿ ಕೈಗಾರಿಕೆ ಪ್ರದೇಶದಲ್ಲಿ 40.59 ಎಕರೆಯಲ್ಲಿ ಮಹಿಳಾ ಪಾರ್ಕ್ ಸ್ಥಾಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಯವರು ಹೇಳಿದರು. 

ಮಹಿಳಾ ಪಾರ್ಕ್‍ಗಾಗಿ 7.31 ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಟೆಂಡರ್ ಕರೆಯಲಾಗಿದೆ. ಈ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ವರ್ಷ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದರು. 

ಕಲಬುರಗಿ ಜಿಲ್ಲಾ ಉಸ್ತವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯ ದರ್ಶಿ ರತ್ನಪ್ರಭಾ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು. 

ಈ ಸಾಮಾನ್ಯ ಸೌಲಭ್ಯ ಕೇಂದ್ರವು ಕೌಶಲ್ಯ ಅಭಿವೃದ್ಧಿ ಕೇಂದ್ರ, ಬಿಜಿನೆಸ್ ಇನ್‍ಕ್ಯಬೇಷನ್ ಸೆಂಟರ್, ಸಾಮೂಹಿಕ ಸಂಸ್ಕರಣೆ ಕೇಂದ್ರ, ವಿವಿಧ ವಿನ್ಯಾಸ, ಪರೀಕ್ಷೆ, ಸಂಶೋಧನೆ, ಅಭಿವೃದ್ಧಿ ಕೇಂದ್ರಗಳು ಇರಲಿವೆ. ತ್ಯಾಜ್ಯ ವಸ್ತು ಸಂಸ್ಕರಣ ಘಟಕ, ಮಾರುಕಟ್ಟೆ ಪ್ರದರ್ಶನ, ಮಾರಾಟ, ಕಚ್ಛಾ ಮಾಲು ಸಂಗ್ರಹ ಮತ್ತಿತರ ಸೌಲಭ್ಯಗಳು ಇರಲಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News