ಡಿ.28ರಂದು ಸಿರಾಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: 1105 ಕೋಟಿ ಮೊತ್ತದ ಕಾಮಗಾರಿಗೆ ಶಂಕುಸ್ಥಾಪನೆ
ತುಮಕೂರು, ಡಿ. 26: ನುಡಿದಂತೆ ನಡೆದಿದ್ದೇವೆ ಸಾಧನಾ ಸಂಭ್ರಮದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 28ರಂದು ತುಮಕೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಶಿರಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 236.50 ಕೋಟಿ ಮೊತ್ತದ ಕಾಮಗಾರಿಗಳ ಉದ್ಘಾಟನೆ ಹಾಗೂ 808.47 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ. ಇಂದಿರಾ ಕ್ಯಾಂಟಿನ್ ಉದ್ಘಾಟನೆ ಹಾಗೂ ವಿವಿಧ ಇಲಾಖೆಗಳ ಸವಲತ್ತುಗಳ ವಿತರಣೆ, ನಿವೇಶನ ಹಕ್ಕುಪತ್ರಗಳನ್ನು ವಿತರಿಸಲಿದ್ದಾರೆ.
ರಾಜ್ಯ ವ್ಯಾಪ್ತಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 27ರಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು ನಂತರ ತುಮಕೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಡಿಸೆಂಬರ್ 28 ಗುರುವಾರ ಬೆಳಗ್ಗೆ 10 ಗಂಟೆಗೆ ತುಮಕೂರು ವಿವಿ ಆವರಣದಿಂದ ಹೆಲಿಕಾಪ್ಟರ್ ಮೂಲಕ ಶಿರಾಗೆ ಭೇಟಿ ನೀಡಲಿದ್ದಾರೆ.ಬೆಳಗ್ಗೆ 10:25ಕ್ಕೆ ಶಿರಾ ವಿಧಾನ ಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಿ ಮಧ್ಯಾಹ್ನ 12:30ಕ್ಕೆ ಶಿರಾದಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ನಿರ್ಗಮಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ.ಬಿ.ಜಯಚಂದ್ರ ವಹಿಸಿಕೊಳ್ಳಲಿದ್ದಾರೆ. ಸಚಿವರುಗಳಾದ ಕಾಗೋಡು ತಿಮ್ಮಪ್ಪ, ಆರ್.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್, ಬಸವರಾಜರಾಯರೆಡ್ಡಿ, ಹೆಚ್.ಕೆ.ಪಾಟೀಲ್, ರೋಷನ್ಬೇಗ್, ರಾಮಲಿಂಗಾರೆಡ್ಡಿ, ಎಸ್.ಎಸ್.ಮಲ್ಲಿಕಾರ್ಜುನ,ಎ.ಮಂಜು,ಎಚ್.ಆಂಜನೇಯ,ಎಂ.ಕೃಷ್ಣಪ್ಪ, ಹೆಚ್.ಸಿ.ಮಹದೇವಪ್ಪ, ತನ್ವೀರ್ಸೇಠ್, ಹೆಚ್.ಎಂ.ರೇವಣ್ಣ, ಈಶ್ವರ್ ಖಂಡ್ರೆ,ಪ್ರಿಯಾಂಕ ಖರ್ಗೆ,ಯು.ಟಿ.ಖಾದರ್,ಲೋಕಸಭಾ ಸದಸ್ಯರುಗಳಾದ ಎಸ್.ಪಿ.ಮುದ್ದಹನುಮೇಗೌಡ, ಬಿ.ಎನ್.ಚಂದ್ರಪ್ಪ,ಜಿ.ಪಂ.ಅಧ್ಯಕ್ಷೆ ಎಂ.ಲತಾ ರವಿಕುಮಾರ್ ಹಾಗೂ ವಿಧಾನ ಸಭಾ ಸದಸ್ಯರು ಹಾಗೂ ವಿಧಾನಪರಿಷತ್ ಸದಸ್ಯರು, ನಿಗಮ ಮಂಡಳಿಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.