ಮೋದಿ ಮಧ್ಯಸ್ಥಿಕೆಗೆ ಆಗ್ರಹ: ಕನ್ನಡಪರ ಹೋರಾಟಗಾರರ ಬಂಧನ, ಬಿಡುಗಡೆ
ಬೆಂಗಳೂರು, ಜ.3: ಮಹಾದಾಯಿ, ಕಳಸಾ ಬಂಡೂರಿ ವಿವಾದವನ್ನು ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ಆಗ್ರಹಿಸಿ ಕನ್ನಡ ಒಕ್ಕೂಟದ ವತಿಯಿಂದ ನಗರದ ನೆಲಮಂಗಲ ಟೋಲ್ ಬಳಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.
ಬುಧವಾರ ನಗರದ ಹೊರವಲಯದ ನೆಲಮಂಗಲದ ಟೋಲ್ ಬಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆಯ ಮುಖಂಡರು, ಗೋವಾ-ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯಗಳ ನಡುವೆ ಉದ್ಭವಿಸಿರುವ ಮಹಾದಾಯಿ ನದಿ ನೀರು ಹಂಚಿಕೆ ವಿವಾದದಿಂದ ಉತ್ತರ ಕರ್ನಾಟಕದ ಜನರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯದಂತಾಗಿದೆ. ಇದನ್ನು ಕೂಡಲೇ ಪ್ರಧಾನಿ ನೇತೃತ್ವದಲ್ಲಿ ಪರಿಹರಿಸಿ ನೀರು ಹಂಚಿಕೆಗೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು.
ರಸ್ತೆಯಲ್ಲಿ ಜಮಾಯಿಸಿದ ನೂರಾರು ಮಂದಿ ಕೇಂದ್ರ ಸರಕಾರದ ನಿರ್ಲಕ್ಷ್ಯ ಧೋರಣೆಯಿಂದ ಆಕ್ರೋಶ ವ್ಯಕ್ತಪಡಿಸಿ, ಕುಡಿಯುವ ನೀರು ಎಲ್ಲರ ಮೂಲಭೂತ ಹಕ್ಕು, ಇಂತಹ ಸಮಸ್ಯೆ ಉಭಯ ರಾಜ್ಯಗಳ ನಡುವೆ ಭುಗಿಲೆದ್ದಾಗ ಸಂಧಾನ ಮಾತುಕತೆ ಮೂಲಕ ಬಗೆಹರಿಸಬೇಕು. ಆದರೆ, ಪ್ರಧಾನಮಂತ್ರಿಗಳು ಇದುವರೆಗೂ ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಮುಂದಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ವಿವಿಧ ಹೆದ್ದಾರಿಗಳ ಬಂದ್: ಬುಧವಾರ ಬೆಳಗಾವಿಯಿಂದ ಬೆಂಗಳೂರಿನವರೆಗಿನ ಹುಬ್ಬಳ್ಳಿ, ಧಾರವಾಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಸೇರಿದಂತೆ ಇತರೆ ನಗರಗಳಲ್ಲೂ ನಗರ ಹೆದ್ದಾರಿಗಳನ್ನು ಬಂದ್ ಮಾಡಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಕನ್ನಡ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟಿಸಿ ಮಹಾದಾಯಿ ನದಿ ನೀರು ಹಂಚಿಕೆ ವಿವಾದ ಶೀಘ್ರ ಬಗೆಹರಿಸುವಂತೆ ಆಗ್ರಹಿಸಿದರು.
ಈ ಸಂಬಂಧ ಪ್ರಧಾನಮಂತ್ರಿಗಳು ಕಾಳಜಿ ವಹಿಸಿ ಮೂರೂ ರಾಜ್ಯಗಳ ಹಿತ ಕಾಪಾಡಬೇಕು. ಅದಕ್ಕಾಗಿ ಮೂರೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವುದು ಸೇರಿದಂತೆ ಇನ್ನಿತರ ಮಾರ್ಗಗಳ ಮೂಲಕ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕೆಂದು ಒತ್ತಾಯಿಸಿದರು.
ಬಂಧನ: ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್ ನಾಗರಾಜ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆ ಕುಮಾರ್, ಕರವೇ ಪ್ರವೀಣ್ ಶೆಟ್ಟಿ ಸೇರಿ ಪ್ರಮುಖರು ಪ್ರತಿಭಟನೆಯಲ್ಲಿ ನೆಲಮಂಗಲದ ಟೋಲ್ ಮುಚ್ಚಲು ಮುಂದಾದ ವೇಳೆ ಪೊಲೀಸರು ಅವರನ್ನು ಬಂಧಿಸಿ, ಕೆಲ ಸಮಯದ ಬಳಿಕ ಬಿಡುಗಡೆಗೊಳಿಸಿದರು.