ದುಂದು ವೆಚ್ಚದ ಬಗ್ಗೆ ದಾಖಲೆ ಒದಗಿಸಲು ಹೈಕೋರ್ಟ್ ಸೂಚನೆ

Update: 2018-01-08 14:15 GMT

ಬೆಂಗಳೂರು, ಜ.8: ಆಡಳಿತಾರೂಢ ರಾಜ್ಯ ಸರಕಾರ ನಡೆಸುತ್ತಿರುವ ಸಾಧನಾ ಸಮಾವೇಶ ತಡೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಗೆ ಸಂಬಂಧಿಸಿದಂತೆ ಸರಕಾರದ ಹಣವನ್ನು ದುಂದು ವೆಚ್ಚ ಮಾಡುತ್ತಿದ್ದಾರೆ ಎಂಬುದಕ್ಕೆ ದಾಖೆಲೆಗಳಿದ್ದರೆ ಒದಗಿಸಲು ಹೈಕೋರ್ಟ್ ಅರ್ಜಿದಾರ ಪರ ವಕೀಲರಿಗೆ ಸೂಚಿಸಿದೆ.

ಹನುಮಂತನಗರದ ಕೀರ್ತಿವರ್ಧನ ಜೋಷಿ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, ರಾಜ್ಯ ಸರಕಾರ ತನ್ನ ನಾಲ್ಕುವರೆ ವರ್ಷಗಳ ಸಾಧನೆಯ ಹೆಸರಿನಲ್ಲಿ ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ವರ್ಷದ ಡಿ.13ರಿಂದ ಸಮಾವೇಶ ನಡೆಸುತ್ತಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೊಕ್ಕಸದ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಈಗಾಗಲೇ ಹಲವೆಡೆ ನಡೆದಿರುವ ಸಮಾವೇಶಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರಕಾರದ ಕಲ್ಯಾಣ ಕಾರ್ಯಕ್ರಮಗಳ ಹಾಗೂ ಸಾಧನೆಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ತಮ್ಮ ವಿರೋಧಿಗಳ ಟೀಕೆಗೆ ಈ ವೇದಿಕೆಗಳನ್ನು ಬಳಸಿಕೊಳ್ಳತೊಡಗಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಸಿದ್ದರಾಮಯ್ಯ ಬೊಕ್ಕಸದ ಹಣವನ್ನು ತಮ್ಮ ಸ್ವಾರ್ಥ ಮತ್ತು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಇದು ಅಕ್ರಮ ಮತ್ತು ಕಾನೂನು ಬಾಹಿರ. ಹೀಗಾಗಿ, ಈ ಪ್ರಕರಣ ಇತ್ಯರ್ಥವಾಗುವವರೆಗೂ ಸಾಧನಾ ಸಮಾವೇಶಕ್ಕೆ ಹಣ ಬಿಡುಗಡೆ ಮಾಡದಂತೆ ತಡೆ ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ಈಗಾಗಲೇ ಖರ್ಚು ಮಾಡಿರುವ ಹಣವನ್ನು ಸಿದ್ದರಾಮಯ್ಯ ಅವರಿಂದ ವಸೂಲು ಮಾಡಬೇಕು. ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ವಿಚಾರಣೆ ನಡೆಸಬೇಕು ಎಂದು ಕೀರ್ತಿವರ್ಧನ ಮನವಿ ಮಾಡಿದರು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜಾಹೀರಾತು ನೀಡುವುದು ಕಾನೂನು ಬದ್ಧವಾಗಿದೆ. ಹಾಗೆಯೆ ಮುಖ್ಯಮಂತ್ರಿಗಳಿಗೆ ಭಾಷಣ ಮಾಡುವ ಸ್ವಾತಂತ್ರವಿದೆ ಎಂದು ಅಭಿಪ್ರಾಯಪಟ್ಟಿತು.

ಸಾಧನಾ ಸಮಾವೇಶಕ್ಕೆ ಹಣವನ್ನು ಸರಕಾರ ದುಂದು ವೆಚ್ಚ ಮಾಡುತ್ತಿರುವ ಬಗ್ಗೆ ದಾಖಲೆಗಳಿದ್ದರೆ ನೀಡಿ ಎಂದು ಅರ್ಜಿದಾರರ ಪರ ವಕೀಲರಿಗೆ ನಿರ್ದೇಶಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News