×
Ad

2018 ರ ಬಜೆಟ್ ಮಂಡನೆಗೆ ತಾಲೀಮು ಪ್ರಾರಂಭ

Update: 2018-01-09 21:45 IST

ಬೆಂಗಳೂರು, ಜ.9: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಹಣಕಾಸು ಸಚಿವರಾಗಿ ಹದಿಮೂರನೇ ಹಾಗೂ ಮುಖ್ಯಮಂತ್ರಿಯಾಗಿ ಆರನೇ ಬಜೆಟ್ ಮಂಡನೆ ಮಾಡಲಿದ್ದು, 2018-19 ನೆ ಸಾಲಿನ ರಾಜ್ಯ ಬಜೆಟ್‌ನ ಪೂರ್ವಭಾವಿಯಾಗಿ ಇಲಾಖಾವಾರು ಸಭೆಗಳನ್ನು ಆರಂಭ ಮಾಡುವ ಮೂಲಕ ಬಜೆಟ್ ಮಂಡನೆ ತಾಲೀಮು ಪ್ರಾರಂಭಿಸಿದ್ದಾರೆ.

ಪ್ರಥಮವಾಗಿ ಜ.18 ರಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘ-ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವುದರೊಂದಿಗೆ ತಯಾರಿ ಆರಂಭವಾಗಲಿದ್ದು, ಜ.19 ರಿಂದ ಫೆ.1 ರವರೆಗೆ ವಿವಿಧ ಇಲಾಖೆಗಳ ಮುಖ್ಯಸ್ಥರು ಹಾಗೂ ಸರಕಾರದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಗಳು ಶಕ್ತಿ ಭವನದ ಸಭಾಂಗಣದಲ್ಲಿ ನಡೆಯಲಿವೆ.

ಜ.19 ರಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಉನ್ನತ ಶಿಕ್ಷಣ, ಕಾರ್ಮಿಕ, ಕೌಶಲ್ಯಾಭಿವೃದ್ಧಿ, ಅರಣ್ಯ, ಪರಿಸರ ಮತ್ತು ಜೀವಿ ಶಾಸ್ತ್ರ, ಇಂಧನ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ.
ಜ.20 ರಂದು ಕನ್ನಡ ಮತ್ತು ಸಂಸ್ಕೃತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕಂದಾಯ ವ್ಯಾಪ್ತಿಗೆ ಒಳಪಟ್ಟ ಮುಜರಾಯಿ, ಜವಳಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ವಕ್ಫ್ ಸೇರಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳು ಹಾಗೂ ಜ.22 ರಂದು ಬೃಹತ್ ಮತ್ತು ಮಧ್ಯಮ ನೀರಾವರಿ ಹಾಗೂ ಸಣ್ಣ ನೀರಾವರಿ ಸೇರಿದಂತೆ ಜಲ ಸಂಪನ್ಮೂಲ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ತೋಟಗಾರಿಕೆ, ಕೃಷಿ ಮಾರುಕಟ್ಟೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮೀನುಗಾರಿಕಾ ಇಲಾಖೆಗಳ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಗಳು ನಡೆಯಲಿವೆ.

ಜ.25 ರಂದು ಕೃಷಿ, ಆಹಾರ ಸಂಸ್ಕರಣೆ, ಪಶುಸಂಗೋಪನೆ, ರೇಷ್ಮೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ಇ-ಆಡಳಿತ ಒಳಗೊಂಡಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಮತ್ತು ಜ.30 ರಂದು ಸಹಕಾರ, ವಸತಿ, ಸಾರ್ವಜನಿಕ ಉದ್ದಿಮೆಗಳು, ಪೌರಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳು, ಬೆಂಗಳೂರು ಅಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಮಹಾನಗರ ಪಾಲಿಕೆಗಳು ಒಳಗೊಂಡಂತೆ ನಗರಾಭಿವೃದ್ಧಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ವ್ಯಾಪ್ತಿಯ ಹಜ್ ಇಲಾಖೆಗಳ ಅಧಿಕಾರಿಗಳ ಸಭೆ ನಡೆಯಲಿದೆ.

ಜ.31 ರಂದು ಗೃಹ, ಲೋಕೋಪಯೋಗಿ, ಸಾರಿಗೆ, ಯೋಜನೆ ಮತ್ತು ಕಾರ್ಯಕ್ರಮ ಅನುಷ್ಠಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಮತ್ತು ಫೆ.1 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಂದಾಯ, ವಾಣಿಜ್ಯ ಮತ್ತು ಕೈಗಾರಿಕಾ ವ್ಯಾಪ್ತಿಯ ಸಣ್ಣ ಕೈಗಾರಿಕೆ, ಸಕ್ಕರೆ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ.

ಫೆ.2 ರಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ಸಂಘ ಸಂಸ್ಥೆಗಳು, ಸಾರಿಗೆ ಸಂಘ ಸಂಸ್ಥೆಗಳು, ಅಬಕಾರಿ ಸಂಘ ಸಂಸ್ಥೆಗಳು ಹಾಗೂ ಭೂ ಮಾರುಕಟ್ಟೆ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಹಾಗೂ ಫೆ.3 ರಂದು ಗೃಹ ಕಚೇರಿ ಕೃಷ್ಣಾದಲ್ಲಿ ದಲಿತ ಸಂಘಟನೆಗಳ ಮುಖಂಡರು, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳು, ಅಲ್ಪಸಂಖ್ಯಾತರ ಸಮುದಾಯದ ಸದಸ್ಯರು ಹಾಗೂ ಸಂಸದರು ಮತ್ತು ಶಾಸಕರೊಂದು ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ.

ಕೊನೆಯದಾಗಿ ಫೆ.5 ರಂದು ಶಕ್ತಿ ಭವನ ಸಭಾಂಗಣದಲ್ಲಿ ರಾಜಸ್ವ ಸಂಗ್ರಹಣಾ ಇಲಾಖೆಗಳಾದ ವಾಣಿಜ್ಯ ತೆರಿಗೆಗಳು, ಅಬಕಾರಿ, ಸಾರಿಗೆ, ಮುದ್ರಾಂಕ ಮತ್ತು ನೋಂದಣಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ಮುಖ್ಯಸ್ಥರೊಂದಿಗೆ ಪರಿಶೀಲನಾ ಸಭೆ ನಡೆಯಲಿದ್ದು, ಫೆ.6 ರಂದು ಅದೇ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಅಹವಾಲು ಹಾಗೂ ಅಭಿಪ್ರಾಯಗಳನ್ನು ಸ್ವೀಕರಿಸಿ ತಾವು ಮಂಡಿಸಲಿರುವ ಹದಿಮೂರನೇ ಬಜೆಟ್‌ಗೆ ರೂಪು-ರೇಷೆಗಳನ್ನು ಸಿದ್ಧಪಡಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News