ಅಧಿಕಾರಿಗಳು ಜನಹಿತಕ್ಕಾಗಿ ಕರ್ತವ್ಯ ನಿರ್ವಹಿಸಬೇಕು: ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ

Update: 2018-01-10 15:18 GMT

ಧಾರವಾಡ, ಜ.10: ಸರಕಾರಿ ಅಧಿಕಾರಿಗಳು ತಮ್ಮ ಅಧಿಕಾರ ಜನರ ಹಿತಕ್ಕಾಗಿ ಇದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಬೇಕು ಎಂದು ಲೋಕಾಯುಕ್ತ ನ್ಯಾ.ಪಿ.ವಿಶ್ವನಾಥ ಶೆಟ್ಟಿ ಹೇಳಿದ್ದಾರೆ.

ಬುಧವಾರ ನಗರದ ಜಿ.ಪಂ.ಸಭಾಂಗಣದಲ್ಲಿ ಕೃಷಿ, ಕೈಗಾರಿಕೆ, ತೋಟಗಾರಿಕೆ, ಸಮಾಜ ಕಲ್ಯಾಣ, ಆಹಾರ ಮತ್ತು ನಾಗರಿಕ ಪೂರೈಕೆ, ಹಿಂದುಳಿದ ಕಲ್ಯಾಣ, ನೀರು ಸರಬರಾಜು, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯವೈಖರಿ, ಪ್ರಗತಿ ಕುರಿತು ನಡೆದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಜನತೆ, ಮಾಧ್ಯಮ ನಮ್ಮ ಕೆಲಸದ ವೈಖರಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ ಎಂಬುದನ್ನು ಯಾವಾಗಲೂ ಮನಸ್ಸಿನಲ್ಲಿಟ್ಟುಕೊಂಡಿರಬೇಕು. ಆಡಳಿತದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಂಡು ಉತ್ತಮ ರೀತಿಯಲ್ಲಿ ಆಡಳಿತ ನಿರ್ವಹಿಸಬೇಕು. ಜನರ ಆಶೋತ್ತರಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಬಗ್ಗೆ ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು.

ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಇರುವ ತೊಂದರೆ ಹಾಗೂ ಜನರ ಬೇಡಿಕೆಗಳಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ಉತ್ತಮ ವಾತಾವರಣ ರೂಪಿಸಲು ಈ ಸಭೆಗಳು ಸಹಕಾರಿಯಾಗಿವೆ ಎಂದು ವಿಶ್ವನಾಥ ಶೆಟ್ಟಿ ಹೇಳಿದರು.

ನಾವು ಮಾಡುವ ಕೆಲಸದ ಮಹತ್ವವನ್ನು ಜನಸಾಮಾನ್ಯರು ಗುರುತಿಸುತ್ತಾರೆ ಮತ್ತು ಆ ಮೂಲಕ ಒಳ್ಳೆಯ ಅಧಿಕಾರಿಯನ್ನು ಗುರುತಿಸಿ, ಗೌರವಿಸುತ್ತಾರೆ. ಸರಕಾರಿ ಸೇವೆಯ ಭಾಗ್ಯ ಎಲ್ಲರಿಗೂ ಸಿಗುವುದಿಲ್ಲ. ಲಭಿಸಿರುವ ಅವಕಾಶವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮತ್ತು ಪಾರದರ್ಶಕವಾಗಿ ನಿರ್ವಹಿಸುವ ಮೂಲಕ ಜನತಾ ಸಾಧನೆಗಾಗಿ ಶ್ರಮಿಸಬೇಕೆಂದು ಅವರು ಹೇಳಿದರು.

ಲೋಕಾಯುಕ್ತ ಪೊಲೀಸ್ ಎಡಿಜಿಪಿ ಸಂಜಯ್ ಸಹಾಯ್ ಮಾತನಾಡಿ, ಲೋಕಾಯುಕ್ತ ಸಂಸ್ಥೆಯು ಭ್ರಷ್ಟಾಚಾರ ನಿಗ್ರಹದ ಜೊತೆಗೆ, ಆಡಳಿತ ಗುಣಮಟ್ಟದ ಸುಧಾರಣೆಗೆ ಒತ್ತು ನೀಡುತ್ತಿದೆ. ಸಾರ್ವಜನಿಕ ಆಡಳಿತದ ಸಾಮರ್ಥ್ಯ ಹೆಚ್ಚಿಸುವುದು. ಉತ್ತಮ ಆಡಳಿತ ನೀಡುವುದು ಎಲ್ಲ ಸಂಸ್ಥೆ, ಕಾಯ್ದೆಗಳ ಉದ್ದೇಶ ಎಂದರು.

ಅಧಿಕಾರಿಗಳು ಪ್ರಸ್ತುತದಲ್ಲಿರುವ ತಂತ್ರಜ್ಞಾನವನ್ನು ತಮ್ಮ ಕರ್ತವ್ಯ ನಿರ್ವಹಣೆ ಯಲ್ಲೂ ಸಮರ್ಪಕವಾಗಿ ಬಳಸಿಕೊಂಡು ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕು. ಕಚೇರಿಯ ಕರ್ತವ್ಯ ನಿರ್ವಹಣೆಯಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಸಾರ್ವಜನಿಕ ಆಡಳಿತದ ವಿಶ್ವಾಸಾರ್ಹತೆಯನ್ನು ಹೆಚ್ಚಿಸಬೇಕು ಎಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ರಾಯಮಾನೆ, ಮಹಾನಗರ ಪೊಲೀಸ್ ಆಯುಕ್ತ ಎಮ್.ಎನ್.ನಾಗಾರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಅಪರ ಜಿಲ್ಲಾಧಿಕಾರಿ ಇಬ್ರಾಹೀಂ ಮೈಗೂರ, ಮಹಾನಗರ ಉಪಪೊಲೀಸ್ ಆಯುಕ್ತ ರೇಣುಕಾ ಕೆ.ಸುಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News