ಟೆಕ್ಕಿ ಅಭಿಜಿತ್ ನಾಪತ್ತೆ ಪ್ರಕರಣ ಎಸ್‌ಐಟಿಗೆ ವಹಿಸಲು ಹೈಕೋರ್ಟ್ ಸೂಚನೆ

Update: 2018-01-16 15:25 GMT

ಬೆಂಗಳೂರು, ಜ.16: ಸಾಫ್ಟ್‌ವೇರ್ ಎಂಜಿನಿಯರ್ ಕುಮಾರ್ ಅಭಿಜಿತ್ ನಾಪತ್ತೆ ಪ್ರಕರಣವನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಮೂಲಕ ತನಿಖೆ ನಡೆಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಸೂಚಿಸಿದೆ.

ಕುಮಾರ್ ಅಭಿಜಿತ್ ನಾಪತ್ತೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಅಭಿಜಿತ್ ತಂದೆ ಅಶೋಕ್ ಕುಮಾರ್ ಸಿನ್ಹಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.

ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಜಿ.ಶಿವಣ್ಣ ಅವರು, ಕುಮಾರ್ ಅಭಿಜಿತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಪತ್ತೆಯಾದ ದಿನದಿಂದ ಇಲ್ಲಿಯವರೆಗೆ ತನಿಖೆ ಮಾಡಿರುವ ಕುರಿತು ತನಿಖೆಯ ಪ್ರಗತಿ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಕುಮಾರ್ ಅಭಿಜಿತ್ ಅವರು ವೈಟ್‌ಫೀಲ್ಡ್‌ಗೆ ಓಎಲ್‌ಎಕ್ಸ್‌ನಲ್ಲಿ ಕಾರು ಮಾರಲು ಹೋದಾಗ ನಾಪತ್ತೆಯಾಗಿದ್ದಾರೆ. ಪೊಲೀಸರು ಎಲ್ಲ ರೀತಿಯಿಂದಲೂ ತನಿಖೆ ನಡೆಸುತ್ತಿದ್ದಾರೆ. ಅಭಿಜಿತ್ ಹುಡುಕಾಟಕ್ಕೆ ಡ್ರೋಣ್ ಸಹ ಬಳಕೆ ಮಾಡಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ಕುಮಾರ್ ಅಭಿಜಿತ್‌ರನ್ನು ಪತ್ತೆ ಹಚ್ಚಲು ಹಾಗೂ ತನಿಖೆ ತೀವ್ರಗೊಳಿಸಲು ವಿಶೇಷ ತನಿಖಾ ತಂಡ(ಎಸ್‌ಐಟಿ)ಕ್ಕೆ ಈ ಪ್ರಕರಣವನ್ನು ನೀಡಿ ಎಂದು ಬೆಂಗಳೂರು ನಗ ಪೊಲೀಸ್ ಆಯುಕ್ತರಿಗೆ ಸೂಚಿಸಿತು.

ಪ್ರಕರಣವೇನು: ಬ್ರಿಟಿಷ್ ಟೆಲಿಕಾಂ ಕಂಪೆನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಕುಮಾರ್ ಅಭಿಜಿತ್ ಅವರು 2017ರ ಡಿ.18ರ ಸಂಜೆ 6.30ಕ್ಕೆ ನಾಪತ್ತೆಯಾಗಿದ್ದರು. ಈ ಬಗ್ಗೆ ಕುಮಾರ್ ತಂದೆ ವೈಟ್‌ಫೀಲ್ಡ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ ಪೊಲೀಸರು ಕುಮಾರ್ ಅಭಿಜಿತ್ ನಾಪತ್ತೆಯಾಗಿರುವ ಬಗ್ಗೆ 2017ರ ಡಿ.20 ಹಾಗೂ 29ರಂದು ಎರಡು ಎಫ್‌ಐಆರ್ ದಾಖಲಿಸಿದ್ದರು. ಆದರೆ, ಈವೆರಗೂ ಆತ ಪತ್ತೆಯಾಗಿಲ್ಲ. ಇದರಿಂದ ಹೈಕೋರ್ಟ್ ಮಟ್ಟಿಲೇರಿರುವ ತಂದೆ ಅಶೋಕ್ ಕುಮಾರ್ ಸಿನ್ಹಾ, ಪೊಲೀಸರು ಈವರೆಗೂ ನನ್ನ ಮಗನನ್ನು ಪತ್ತೆ ಹಚ್ಚಿಲ್ಲ. ಹೀಗಾಗಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News