ಉಡುಪಿ ಜಿಲ್ಲೆಯಲ್ಲಿ ಬ್ಯಾನರ್ ಅಳವಡಿಕೆಗೆ ಪೊಲೀಸ್ ಅನುಮತಿ ಕಡ್ಡಾಯ
ಪಡುಬಿದ್ರೆ, ಜ. 20: ಇನ್ನು ಮುಂದೆ ಉಡುಪಿ ಜಿಲ್ಲೆಯಲ್ಲಿ ಎಲ್ಲೆಂದರಲ್ಲಿ ಬ್ಯಾನರ್ ಅಳವಡಿಸುವಂತಿಲ್ಲ. ಒಂದು ವೇಳೆ ಬ್ಯಾನರ್, ಬಂಟಿಂಗ್ಸ್ ಅಳವಡಿಸ ಬೇಕಾದೆ ಸ್ಥಳೀಯ ಪೊಲೀಸ್ ಠಾಣೆಯ ನಿರಾಪೇಕ್ಷಣಾ ಪತ್ರ ಪಡೆಯುವುದು ಕಡ್ಡಾಯ.
ಹಿಂದೆ ಕೇವಲ ಕಾರ್ಯಕ್ರಮಗಳ ಬ್ಯಾನರ್, ಕಟೌಟ್ಗಳನ್ನು ಅಳವಡಿಸಲು ಸ್ಥಳೀಯ ಸಂಸ್ಥೆಗಳ ಪರವಾನಿಗೆ ಪಡೆದು ಎಲ್ಲೆಂದರಲ್ಲಿ ಬ್ಯಾನರ್, ಕಟೌಟ್ ಗಳನ್ನು ಅಳವಡಿಸಲಾಗುತ್ತಿತ್ತು. ಇದರಿಂದ ಈ ಬ್ಯಾನರ್ಗಳಿಂದಾಗಿಯೇ ಹಲವು ಕಡೆಗಳಲ್ಲಿ ಶಾಂತಿ ಸುವ್ಯವಸ್ಥೆಗೂ ಧಕ್ಕೆ ಉಂಟಾಗುತಿತ್ತು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು 2017 ಡಿಸೆಂಬರ್ 2ರಂದು ಬ್ಯಾನರ್, ಬಂಟಿಂಗ್ಸ್ ಅಳವಡಿಕೆಗೆ ಈ ಆದೇಶವನ್ನು ಹೊರಡಿಸಿದ್ದಾರೆ.
ಪ್ರತಿಭಟನೆ, ಪ್ರಚಾರ, ಶುಭಕೋರುವ ಹಾಗೂ ಇತರೆ ಕಾರ್ಯಕ್ರಮಗಳ ಬಗ್ಗೆ ಬ್ಯಾನರ್, ಬಂಟಿಂಗ್ಸ್ಗಳನ್ನು ಅಳವಡಿಸಲು ಮತ್ತು ಭಿತ್ತಿ ಪತ್ರಗಳನ್ನು ಹಂಚಲು ಸ್ಥಳಿಯಾಡಳಿತ ಅನುಮತಿ ನೀಡುವ ಮೊದಲು ಸ್ಥಳೀಯ ಪೊಲೀಸ್ ಠಾಣೆಯಿಂದ ನಿರಾಪೇಕ್ಷಣಾ ಪತ್ರ ಕಡ್ಡಾಯ.
ಕಾಪು ವೃತ್ತ ನಿರೀಕ್ಷಕ ಹಾಲಮೂರ್ತಿ ರಾವ್ ಪತ್ರಿಕೆಯೊಂದಿಗೆ ಮಾತನಾಡಿ, ಜಿಲ್ಲಾಧಿಕಾರಿಗಳ ಆದೇಶ ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಉತ್ತಮ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಪೊಲೀಸ್ ಉಪ ವಿಭಾಗಾಧಿಕಾರಿಗಳಿಗೆ, ವೃತ್ತ ನಿರೀಕ್ಷಕರಿಗೆ ಹಾಗೂ ಎಲ್ಲಾ ಪೊಲೀಸ್ ಠಾಣೆಗಳಿಗೆ ಈ ಕುರಿತು ಪತ್ರ ಬರೆದಿದ್ದಾರೆ.