ಜೆಡಿಎಸ್ ಸೇರಲ್ಲ, ಕಾಂಗ್ರೆಸ್ ಬಿಡಲ್ಲ: ಸತೀಶ್ ಜಾರಕಿಹೊಳಿ

Update: 2018-01-23 14:54 GMT

ಬೆಳಗಾವಿ, ಜ.23: ನಾನು ಕಾಂಗ್ರೆಸ್ ಬಿಡುವುದಿಲ್ಲ, ಜೆಡಿಎಸ್ ಸೇರುವ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಮಾಜಿ ಸಚಿವ, ಶಾಸಕ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಬಿಟ್ಟು ಹೋಗುವುದಿಲ್ಲ. ಜೆಡಿಎಸ್‌ನವರು ಯಾರೂ ನನ್ನನ್ನು ಸಂಪರ್ಕಿಸಿಲ್ಲ. ನನ್ನ ಅಸಮಾಧಾನ ನನ್ನ ಜಿಲ್ಲೆಯ ಮಟ್ಟಿಗೆ ಮಾತ್ರ ಎಂದು ಹೇಳಿದರು.

ನಾನೂ ಕೂಡ ಮುಖ್ಯಮಂತ್ರಿ ಆಕಾಂಕ್ಷಿ. ಆದರೆ ಈಗಲ್ಲ. ಹತ್ತು ವರ್ಷಗಳ ನಂತರ ಮುಖ್ಯಮಂತ್ರಿ ಹುದ್ದೆ ಕೇಳುತ್ತೇನೆ. ಎರಡು ಚುನಾವಣೆ ನಂತರ ಮುಖ್ಯಮಂತ್ರಿಯಾಗುವ ಕನಸು ನನ್ನ ಮುಂದಿದೆ. ಸದ್ಯಕ್ಕೆ ಮುಖ್ಯಮಂತ್ರಿಯಾಗುವ ಆಸೆಯಿಲ್ಲ. ಈ ಬಾರಿ ಚುನಾವಣೆ ಅಥವಾ ಮುಂದಿನ ಚುನಾವಣೆಯಲ್ಲಿ ಯಾರು ಮುಖ್ಯಮಂತ್ರಿಯಾಗುತ್ತಾರೆ ಎಂದು ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು.

ಅಸಮಾಧಾನವಿದೆ

ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಬಗ್ಗೆ ನನಗೆ ಅಸಮಾಧಾನವಿದೆ. ಹಾಗೆಂದ ಮಾತ್ರಕ್ಕೆ ನಾನು ಪಕ್ಷ ಬಿಟ್ಟು ಹೋಗುತ್ತೇನೆ ಎಂದು ತಿಳಿಯುವುದು ತಪ್ಪು. ಸಂಘಟನೆ ನಡೆಯುತ್ತಿದೆ ಎಂದು ಹೇಳಿದರು. ನನ್ನ ಬೆಂಬಲಿಗರಿಗೆ ಟಿಕೆಟ್ ತಪ್ಪಿಸುವ ಪ್ರಯತ್ನ ನಡೆದಿದೆ. ಇದನ್ನು ನಾನು ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದೇನೆ. ಅವರಿಗೆ ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸ ನನಗಿದೆ.
-ಸತೀಶ್ ಜಾರಕಿಹೊಳಿ, ಮಾಜಿ ಸಚಿವ, ಶಾಸಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News