ನುಡಿದಂತೆ ನಡೆದು ರಾಜ್ಯದ ಅಭಿವೃದ್ಧಿ ಸಾಧಿಸಿದ್ದೇವೆ: ವಿನಯ ಕುಲಕರ್ಣಿ

Update: 2018-01-26 16:34 GMT

ಧಾರವಾಡ, ಜ.26: ವ್ಯಕ್ತಿಗತ ಮತ್ತು ಸಮುದಾಯದ ಹಿತ ಸಾಧನೆಯೊಂದಿಗೆ ರಾಷ್ಟ್ರದ ಅಭಿವೃದ್ಧಿಗಾಗಿ ಸಂವಿಧಾನ ರಚನಾಕಾರರು ಸಂವಿಧಾನದಲ್ಲಿ ವ್ಯಕ್ತಪಡಿಸಿದ ಆಶಯದಂತೆ, ನಮ್ಮ ಸರಕಾರ ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದು ರಾಜ್ಯದ ಅಭಿವೃದ್ಧಿ ಸಾಧಿಸುತ್ತಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದ್ದಾರೆ.

ಶುಕ್ರವಾರ ಧಾರವಾಡ ಜಿಲ್ಲಾ ಕ್ರೀಡಾಂಗಣದಲ್ಲಿ 69ನೆ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ವಿವಿಧ ಪಡೆಗಳ ಪಥ ಸಂಚಲನ ವೀಕ್ಷಿಸಿ, ಗೌರವ ವಂದನೆ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.

ನುಡಿದಂತೆ ನಡೆಯುವ ಭರವಸೆಯೊಂದಿಗೆ ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ, ಕೊಟ್ಟ ಮಾತಿನಂತೆ ಸ್ವಚ್ಛ, ಶುದ್ಧ ಹಾಗೂ ದಕ್ಷ ಆಡಳಿತ ನೀಡುತ್ತಿದೆ. 5ನೆ ವರ್ಷದಲ್ಲಿ ಮುಂದುವರೆದಿರುವ ಸರಕಾರ ಶೇ.95ಕ್ಕೂ ಹೆಚ್ಚು ಸಾಧನೆ ಮಾಡಿದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ 165 ಭರವಸೆಗಳಲ್ಲಿ ಈಗಾಗಲೇ 155 ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಿದ ಹೆಮ್ಮೆ ನಮಗಿದೆ ಎಂದು ಅವರು ಹೇಳಿದರು.

ಅನ್ನಭಾಗ್ಯ ಯೋಜನೆಯಡಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಧಾರವಾಡ ಜಿಲ್ಲೆಯ 3 ಲಕ್ಷ 20 ಸಾವಿರ ಅರ್ಹ ಪಡಿತರ ಚೀಟಿ ಹೊಂದಿದ ಕುಟುಂಬಗಳಿಗೆ ಸೇರಿದ ಸುಮಾರು 10 ಲಕ್ಷ ಅರ್ಹ ಫಲಾನುಭವಿಗಳಿಗೆ 39.67 ಕೋಟಿ ರೂ.ಗಳ ವೆಚ್ಚದಲ್ಲಿ ಉಚಿತ ಅಕ್ಕಿ ಹಾಗೂ ರಿಯಾಯಿತಿ ದರದಲ್ಲಿ ಆಹಾರಧಾನ್ಯ ಪೂರೈಸಲಾಗಿದೆ ಎಂದು ಅವರು ತಿಳಿಸಿದರು.

ಕೃಷಿಕರ ಬದುಕಿನಲ್ಲಿ ಮಹತ್ವದ ಬದಲಾವಣೆ ತಂದಿರುವ ಹಾಗೂ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಪೂರಕವಾಗಿರುವ ಕೃಷಿಭಾಗ್ಯ ಯೋಜನೆಯಡಿ ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ 51.89 ಕೋಟಿ ರೂ.ಗಳ ವೆಚ್ಚದಲ್ಲಿ 6044 ಕೃಷಿಹೊಂಡಗಳನ್ನು ನಿರ್ಮಿಸಲಾಗಿದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ 17,758 ರೈತರಿಗೆ ಸೇರಿದ 17825.5 ಹೆಕ್ಟೇರ್ ಭೂಮಿಯನ್ನು ಸೂಕ್ಷ್ಮ ನೀರಾವರಿಗೆ ಒಳಪಡಿಸಲಾಗಿದೆ. ಕೃಷಿ ಯಂತ್ರಧಾರೆ ಯೋಜನೆಯಡಿ ರೈತರಿಗೆ ಸಕಾಲದಲ್ಲಿ ಮತ್ತು ಕಡಿಮೆ ಬಾಡಿಗೆ ದರದಲ್ಲಿ ಕೃಷಿ ಯಂತ್ರೋಪಕರಣಗಳನ್ನು ಒದಗಿಸಲು 7 ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ವಿವರಣೆ ನೀಡಿದರು.

ಸಹಕಾರ ಬ್ಯಾಂಕುಗಳಲ್ಲಿನ 50 ಸಾವಿರ ರೂ.ವರೆಗಿನ ಸಾಲವನ್ನು ನಮ್ಮ ಸರಕಾರ ಮನ್ನಾ ಮಾಡಿದೆ. ಇದರಿಂದ ಜಿಲ್ಲೆಯ ರೈತರ 79.96 ಕೋಟಿ ರೂ.ಸಾಲ ಮನ್ನಾ ಆಗಿದ್ದು, 22,207 ರೈತರು ಪ್ರಯೋಜನ ಪಡೆದಿದ್ದಾರೆ ಎಂದು ಅವರು ಹೇಳಿದರು.

ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಪ್ರೋತ್ಸಾಹ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ 25.20 ಕೋಟಿ ರೂ.ಗಳಿಗೂ ಅಧಿಕ ಪ್ರೋತ್ಸಾಹ ಧನವನ್ನು 42,277 ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ವಿನಯ ಕುಲಕರ್ಣಿ ತಿಳಿಸಿದರು.

ನಾಡಿಗೆ, ದೇಶಕ್ಕೆ ಹಲವಾರು ಪ್ರತಿಭೆಗಳನ್ನು ನೀಡಿರುವ ಧಾರವಾಡದ ಪ್ರತಿಷ್ಠಿತ ಕರ್ನಾಟಕ ಕಾಲೇಜು ಇದೀಗ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ರಾಜ್ಯ ಸರಕಾರವು ಶತಮಾನೋತ್ಸವ ಆಚರಣೆಗೆ 10 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ಧಾರವಾಡದಲ್ಲಿ ಉನ್ನತ ಶಿಕ್ಷಣ ಅಕಾಡೆಮಿ ಸ್ಥಾಪನೆಗೆ ರಾಜ್ಯ ಸರಕಾರವು 45 ಕೋಟಿ ರೂ.ಗಳಿಗೂ ಅಧಿಕ ಅನುದಾನ ಒದಗಿಸಿದೆ. ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ಆವರಣದಲ್ಲಿ 18.21 ಕೋಟಿ ರೂ.ವೆಚ್ಚದಲ್ಲಿ ಕಾನೂನು ಶಾಲೆಯ ಕಟ್ಟಡ ಹಾಗೂ 1.73 ಕೋಟಿ ರೂ.ವೆಚ್ಚದಲ್ಲಿ ಸುಸಜ್ಜಿತ ಅತಿಥಿ ಗೃಹ ನಿಮಿಸರ್ಲಾಗಿದೆ ಎಂದು ಅವರು ತಿಳಿಸಿದರು.

ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಡಿ ಅವಳಿ ನಗರಗಳಲ್ಲಿ 37 ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. 1662 ಕೋಟಿ ರೂ.ಗಳ ಪ್ರಮುಖ ಅಭಿವೃದ್ಧಿ ಯೋಜನೆಯಾಗಿದ್ದು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಶೇ.50 ರ ಅನುಪಾತದಲ್ಲಿ ಅನುದಾನ ಒದಗಿಸುತ್ತವೆ. ಇಲ್ಲಿಯವರೆಗೆ ಕೇಂದ್ರ ಹಾಗೂ ರಾಜ್ಯ ಸರಕಾರದ 216 ಕೋಟಿ ರೂ.ಗಳು ಬಿಡುಗಡೆಯಾಗಿವೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಆರ್. ಸ್ನೇಹಲ್, ಅಪರ ಜಿಲ್ಲಾಧಿಕಾರಿ ಇಬ್ರಾಹೀಂ ಮೈಗೂರ, ಅವಳಿ ನಗರದ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News