×
Ad

ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ರಾಮಲಿಂಗಾರೆಡ್ಡಿ

Update: 2018-01-27 19:58 IST

ಬೆಂಗಳೂರು, ಜ.27: ರಾಜ್ಯ ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಪ್ರಯತ್ನಿಸುವವರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಅಂತಹವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

ಶನಿವಾರ ವಿಕಾಸಸೌಧದಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬರುವ ಎಲ್ಲ ಪೊಲೀಸ್ ಠಾಣೆಗಳ ಇನ್ಸ್‌ಪೆಕ್ಟರ್‌ಗಳು, ಎಸಿಪಿಗಳು, ಡಿಸಿಪಿಗಳು ಹಾಗೂ ಬೆಂಗಳೂರು ನಗರ ಆಯುಕ್ತರ ಜತೆ ನಡೆಸಿದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಹೊಸದಾಗಿ 2789 ಜನರನ್ನು ರೌಡಿ ಶೀಟರ್ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮಾಡುವ ಶಾಲಾ, ಕಾಲೇಜುಗಳ ಬಳಿ ಪೊಲೀಸರ ಗಸ್ತು ಮಾಡಲು ಆದೇಶ ಮಾಡಲಾಗಿದೆ. ಅಲ್ಲದೆ, ಶಾಲಾ, ಕಾಲೇಜು, ಹೊಟೇಲ್‌ಗಳಲ್ಲಿ, ರಸ್ತೆಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಪಿಜಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ಪಿಜಿ ಮಾಲಕರಿಗೆ ಆದೇಶ ನೀಡಲಾಗಿದೆ. ಈ ಸಂಬಂಧ ಐಟಿ, ಬಿಟಿ ಸಂಸ್ಥೆಗಳು ಹೆಚ್ಚಿರುವ ಪ್ರದೇಶಗಳಲ್ಲಿ 121 ಸಭೆಗಳನ್ನು ಮಾಡಲಾಗಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಗಾಂಜಾ, ಅಫೀಮು ಸೇರಿದಂತೆ ಇನ್ನಿತರ ಮಾದಕ ವಸ್ತುಗಳ ಮಾರಾಟದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಮಾದಕ ವಸ್ತುಗಳು ನಗರದೊಳಗೆ ಪ್ರವೇಶ ಮಾಡುತ್ತಿರುವ ಮೂಲದ ಶೋಧಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ನಗರದಲ್ಲಿ ತಲೆ ಎತ್ತಿದ್ದ ಹುಕ್ಕಾ ಬಾರ್, ಗೇಮ್ಸ್ ಅಡ್ಡಾಗಳಿಗೆ ಕಡಿವಾಣ ಹಾಕಲಾಗಿದೆ. ಭಿಕ್ಷಾಟನೆಯು ಕಡಿಮೆಯಾಗಿದೆ. ಹೊಸದಾಗಿ 13 ಮುಂಗಡ ಪಾವತಿ (ಪ್ರೀಪೇಡ್) ಆಟೊ ನಿಲ್ದಾಣಗಳನ್ನು ರಚಿಸಲಾಗಿದೆ. ಹೊಸದಾಗಿ 57 ಆಟೋ ನಿಲ್ದಾಣಗಳನ್ನು ಸ್ಥಾಪಿಸಲಾಗಿದೆ. 117 ಕಡೆ ಆಟೋ ನಿಲ್ದಾಣಗಳಿಗೆ ಬ್ಯಾರಿಕೇಡ್ ಅಳವಡಿಸಲಾಗಿದೆ ಎಂದು ಅವರು ವಿವರಣೆ ನೀಡಿದರು.

ಮದ್ಯಪಾನ ಮಾಡಿ ವಾಹನ ಚಲಾಯಿಸುವ ಸವಾರರಿಗೆ ದಂಡ ವಿಧಿಸಲು ಅವಕಾಶವಿದೆಯೆ ಹೊರತು, ಜೈಲಿಗೆ ಕಳುಹಿಸಲು ಸಾಧ್ಯವಿಲ್ಲ. ಅಂತಹವರ ವಿರುದ್ಧ ಐಪಿಸಿ ಸೆಕ್ಷನ್ 282 ಅಡಿಯಲ್ಲಿ ಪ್ರಕರಣ ದಾಖಲು ಮಾಡುತ್ತಿದ್ದ ಪರಿಣಾಮ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವಂತೆ ಕಂಡು ಬರುತ್ತಿದೆ ಎಂದು ಅವರು ಹೇಳಿದರು.

ಪ್ರತಿ ವರ್ಷ ಸರಾಸರಿ 32 ಸಾವಿರಗಳಷ್ಟು ಪ್ರಕರಣಗಳು ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ದಾಖಲಾಗುತ್ತಿದೆ. ಆದರೆ, ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲು ಮಾಡುವುದರಿಂದ ಇವುಗಳ ಸಂಖ್ಯೆ 45 ಸಾವಿರಕ್ಕೆ ಹೆಚ್ಚುತ್ತಿದೆ. ಆದುದರಿಂದ, ಈ ಪ್ರಕರಣಗಳನ್ನು ಐಪಿಸಿ ಸೆಕ್ಷನ್ ಅಡಿಯಲ್ಲಿ ತರದಂತೆ ಸೂಚನೆ ನೀಡಲಾಗಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

2008-2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಅಪರಾಧ ಪ್ರಕರಣಗಳ ಸರಾಸರಿ ಪ್ರಮಾಣ ಶೇ.6ರಷ್ಟಿತ್ತು. ಆದರೆ, 2013-2017ರವರೆಗೆ ಅಪರಾಧ ಪ್ರಕರಣಗಳ ಸರಾಸರಿ ಪ್ರಮಾಣ 2015ರಲ್ಲಿ ಶೇ.4ಕ್ಕೆ ಇಳಿಕೆಯಾಗಿದ್ದು, ಈಗ ಶೇ.5ರಷ್ಟಿದೆ. ಎನ್‌ಸಿಬಿಯ ಅಂಕಿ ಅಂಶಗಳನ್ನು ಗಮನಿಸಿದರೆ ಸತ್ಯಾಂಶ ತಿಳಿಯುತ್ತದೆ ಎಂದು ಬಿಜೆಪಿ ನಾಯಕರಿಗೆ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದರು.

ಬಿಜೆಪಿ ಸರಕಾರದಲ್ಲಿ ಆರ್.ಅಶೋಕ್ ಗೃಹ ಸಚಿವರಾಗಿದ್ದರು. ಆಗ ಯಾಕೆ ಅಪರಾಧ ಪ್ರಕರಣಗಳು ಕಡಿಮೆಯಾಗಲಿಲ್ಲ. ನಮ್ಮ ಅವಧಿಯಲ್ಲಿ ಶೇ.1ರಷ್ಟು ಅಪರಾಧಗಳನ್ನು ನಿಯಂತ್ರಿಸಿದ್ದೇವೆ. ಸುಮಾರು 5-6 ಸಾವಿರಗಳಷ್ಟು ಪ್ರಕರಣಗಳು ಇಳಿಮುಖವಾಗುವಂತಾಗಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.
ಪೊಲೀಸರ ಮೇಲೆ ಹಲ್ಲೆ ನಡೆಯುವಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಇಂತಹ ಕೃತ್ಯಗಳನ್ನು ಯಾರೇ ಮಾಡಿದರೂ ಅವರ ವಿರುದ್ಧ ಮುಲಾಜಿಲ್ಲದೆ ಗೂಂಡಾ ಕಾಯ್ದೆ ಪ್ರಯೋಗಿಸುವಂತೆ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಪೊಲೀಸರ ಮೇಲೆ ಹಲ್ಲೆ ನಡೆಸುವಂತಹ ವಿದೇಶಿ ವಿದ್ಯಾರ್ಥಿಗಳ ವಿರುದ್ಧ ಪ್ರಕರಣಗಳನ್ನು ದಾಖಲು ಮಾಡದೆ, ಅವರ ವೀಸಾವನ್ನು ರದ್ದುಪಡಿಸಿ ಅವರ ದೇಶಕ್ಕೆ ವಾಪಸ್ ಕಳುಹಿಸಲಾಗುವುದು. ಪ್ರಕರಣ ದಾಖಲು ಮಾಡಿದರೆ, ಅವರನ್ನು ಇಲ್ಲೆ ಉಳಿಸಿಕೊಳ್ಳಬೇಕಾಗುತ್ತದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News