ಮುಝಾಫರ್‌ ನಗರ್ ಘರ್ಷಣೆ: 8 ಮಂದಿಗೆ ಗಾಯ

Update: 2018-01-28 17:05 GMT

ಮುಝಾಫರ್‌ನಗರ್, ಜ. 28: ಇಲ್ಲಿನ ಸಂಭಲ್‌ಹೇಡಾ ಗ್ರಾಮದಲ್ಲಿ ಬಾಲಕಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ಎರಡು ಗುಂಪುಗಳ ನಡುವೆ ಶನಿವಾರ ಸಂಭವಿಸಿದ ಘರ್ಷಣೆಯಲ್ಲಿ 8 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಿರಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಸಾಂಭಲ್‌ಹೇಡಾ ಗ್ರಾಮದಲ್ಲಿ ಈ ಘರ್ಷಣೆ ಸಂಭವಿಸಿತು.

ಘರ್ಷಣೆಗೆ ಸಂಬಂಧಿಸಿ 6 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಎಸ್.ಕೆ.ಎಸ್. ಪ್ರತಾಪ್ ಸಿಂಗ್ ಹೇಳಿದ್ದಾರೆ. 17 ವರ್ಷದ ಬಾಲಕಿಗೆ ಇನ್ನೊಂದು ಸಮುದಾಯಕ್ಕೆ ಸೇರಿದ ಯುವಕ ಕಿರುಕುಳ ನೀಡಿದ್ದ. ಈ ಬಗ್ಗೆ ಬಾಲಕಿಯ ಸಮುದಾಯದವರು ಯುವಕನನ್ನು ಪ್ರಶ್ನಿಸಿದ್ದರು. ಇದರಿಂದ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿತು ಎಂದು ಅವರು ತಿಳಿಸಿದ್ದಾರೆ. ಎರಡು ಸಮುದಾಯಗಳು ಪರಸ್ಪರ ಕಲ್ಲು ತೂರಾಟ ನಡೆಸಿ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ 8 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News