ಯುವಕರನ್ನು ಪೊಲೀಸ್ ಸೇವೆಗೆ ಆಕರ್ಷಿಸಿ: ಜಿಲ್ಲಾ ಪೊಲೀಸರಿಗೆ ಎಡಿಜಿಪಿ ಚರಣ್ ರೆಡ್ಡಿ ಕರೆ
ಮಂಗಳೂರು, ಜ.29: ದ.ಕ. ಮತ್ತು ಉಡುಪಿ ಜಿಲ್ಲೆಯಿಂದ ಪೊಲೀಸ್ ಇಲಾಖೆಗೆ ಸೇರುವ ಯುವಕರ ಸಂಖ್ಯೆ ತೀರಾ ಕಡಿಮೆ ಇದ್ದು, ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ತರಬೇತಿ) ಕೆ.ಎಸ್.ಆರ್.ಚರಣ್ ರೆಡ್ಡಿ ದ.ಕ. ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.
ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ ವತಿಯಿಂದ ಇಂದು ಬೆಳಗ್ಗೆ ಆಯೋಜಿಸಲಾಗಿದ್ದ 14ನೆ ತಂಡದ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.
ಪೊಲೀಸ್ ಇಲಾಖೆಯಲ್ಲಿ ಸೇವೆಗೆ ಸೇರ್ಪಡೆಗೊಳ್ಳುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳ ಯುವಕರಿಗೂ ಆದ್ಯತೆ ನೀಡಬೇಕು. ಈ ಬಗ್ಗೆ ಅಧಿಕಾರಿಗಳು ಯವಕರನ್ನು ಮನವೊಲಿಸುವ ಪ್ರಯತ್ನ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಕಳೆದ 8 ತಿಂಗಳಿನಿಂದ ತರಬೇತಿ ಪಡೆದ 95 ಸಿಬ್ಬಂದಿಯಿಂದ ನಿರ್ಗಮನ ಪಥ ಸಂಚಲನ ನಡೆಯಿತು.
ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್, ದ.ಕ. ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಆರ್.ರವಿಕಾಂತೇ ಗೌಡ, ಡಿಸಿಪಿ ಹನುಮಂತರಾಯ ಉಪಸ್ಥಿತರಿದ್ದರು.