ಶಿವಮೊಗ್ಗ : ಫೆ.10 ರೊಳಗಾಗಿ ಮತಗಟ್ಟೆಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚನೆ
ಶಿವಮೊಗ್ಗ, ಜ. 31: ಜಿಲ್ಲೆಯಲ್ಲಿರುವ ಎಲ್ಲಾ 1721 ಮತಗಟ್ಟೆಗಳಲ್ಲಿ ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಅಗತ್ಯ ಮೂಲಸೌಕರ್ಯಗಳನ್ನು ಫೆಬ್ರವರಿ 10ರ ಒಳಗಾಗಿ ಕಲ್ಪಿಸಿ ವರದಿಯನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಅವರು ಅಧಿಕಾರಿಗಳಿಗೆ ತಿಳಿಸಿದರು.
ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚುನಾವಣಾ ಸಿದ್ಧತೆ ಕುರಿತು ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.
ಎಲ್ಲಾ ಮತಗಟ್ಟೆಗಳಲ್ಲಿ ವಿಕಲಚೇತನರಿಗೆ ಅನುಕೂಲವಾಗುವಂತೆ ರ್ಯಾಂಪ್, ಕುಡಿಯುವ ನೀರಿನ ಸೌಲಭ್ಯ, ವಿದ್ಯುತ್ ವ್ಯವಸ್ಥೆ, ಮತದಾರರಿಗೆ ಕುಳಿತುಕೊಳ್ಳಲು ಕೋಣೆ, ಅಗತ್ಯ ಪೀಠೋಪಕರಣಗಳು, ಶೌಚಾಲಯ ವ್ಯವಸ್ಥೆಯನ್ನು ಕಡ್ಡಾಯವಾಗಿ ಕಲ್ಪಿಸಲು ಚುನಾವಣಾ ಆಯೋಗ ಆದೇಶ ನೀಡಿದೆ. ಮತಗಟ್ಟೆಗಳ ದುರಸ್ತಿ ಕಾರ್ಯ, ಮೂಲಸೌಕರ್ಯ ಕಲ್ಪಿಸುವ ಕಾರ್ಯವನ್ನು ಸಂಬಂಧಪಟ್ಟ ಇಲಾಖೆಗಳು ತಕ್ಷಣ ಕೈಗೆತ್ತಿಕೊಳ್ಳಬೇಕು. ಹೆಚ್ಚಿನ ಅನುದಾನ ಅಗತ್ಯವಿರುವ ಕಾಮಗಾರಿಗಳ ಅಂದಾಜು ಪಟ್ಟಿಯನ್ನು ಅನುಮೋದನೆಗಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ ತಕ್ಷಣ ಸಲ್ಲಿಸುವಂತೆ ಅವರು ತಿಳಿಸಿದರು.
ಮತದಾರರ ಮೇಲೆ ಒತ್ತಡ ಬೀರುವಂತಹ ವ್ಯಕ್ತಿಗಳನ್ನು, ಸಮಾಜಘಾತುಕರನ್ನು ಗುರುತಿಸಿ ಅವರಿಂದ ಬಾಂಡ್ ಪಡೆಯುವ ಕಾರ್ಯವನ್ನು ಆರಂಭಿಸಬೇಕು. ಹಿಂದಿನ ಚುನಾವಣೆ ಸಂದರ್ಭದಲ್ಲಿ ನಡೆದಿರುವ ಅಹಿತಕರ ಘಟನೆಗಳು, ಬದಲಾದ ಸಾಮಾಜಿಕ ಸನ್ನಿವೇಶದಲ್ಲಿ ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿ ಉಂಟಾಗಿರುವ ಬದಲಾವಣೆಗಳನ್ನು ಗುರುತಿಸಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಬೇಕು. ಈ ರೀತಿಯಲ್ಲಿ ಗುರುತಿಸುವ ಸಂದರ್ಭದಲ್ಲಿ ಅದಕ್ಕೆ ಸೂಕ್ತ ವಿವರಣೆಯನ್ನು ನೀಡಬೇಕು ಎಂದು ಹೇಳಿದರು.
ಪೊಲೀಸ್ ವರಿಷ್ಟಾಧಿಕಾರಿ ಅಭಿನವ ಖರೆ ಅವರು ಮಾತನಾಡಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳ ಗುರುತಿಸುವಿಕೆ, ಆಮಿಷ ಮತ್ತು ಒತ್ತಡಕ್ಕೆ ಒಳಗಾಗಲು ಸಾಧ್ಯವಿರುವ ಮತದಾರರ ಪ್ರದೇಶಗಳ ಗುರುತಿಸುವಿಕೆ ಕಾರ್ಯವನ್ನು ತಕ್ಷಣದಿಂದ ಆರಂಭಿಸುವಂತೆ ತಿಳಿಸಿದರು.
ದುರ್ಬಲ ವರ್ಗದವರು, ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರಾಗಿರುವ ಜಾತಿಗಳು, ಧರ್ಮದವರು, ಹೆಚ್ಚಿನ ಸಂಖ್ಯೆಯಲ್ಲಿ ಬಡವರು ಮತ್ತು ಕೂಲಿಕಾರರು ಇರುವ ಪ್ರದೇಶಗಳು ಇತ್ಯಾದಿ ಮತಗಟ್ಟೆ ಪ್ರದೇಶಗಳನ್ನು ಗುರುತಿಸಿ ಅಲ್ಲಿನ ಜನರಲ್ಲಿ ಭದ್ರತೆಯ ಭಾವನೆಯನ್ನು ಮೂಡಿಸುವ ಕಾರ್ಯ ನಡೆಸಬೇಕಿದೆ. ಪ್ರಥಮ ಹಂತವಾಗಿ ಈಗಿನಿಂದಲೇ ಅಂತಹ ಪ್ರದೇಶಗಳನ್ನು ಗುರುತಿಸುವ ಕಾರ್ಯವನ್ನು ಕಂದಾಯ ಇಲಾಖೆ ಹಾಗೂ ಪೊಲೀಸರು ನಡೆಸಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅವರು ಮತಗಟ್ಟೆಗಳು, ಅದರ ವ್ಯಾಪ್ತಿ, ಚುನಾವಣಾಧಿಕಾರಿಗಳ ಕರ್ತವ್ಯಗಳು, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳು ಇತ್ಯಾದಿ ವಿವರಗಳ ಸಮಗ್ರ ಮಾಹಿತಿಯನ್ನು ಒದಗಿಸಿದರು. ಜಿಲ್ಲೆಯ ಮತಗಟ್ಟೆಗಳ ಸಂಖ್ಯೆ ಕಳೆದ ಬಾರಿ 1707 ಇದ್ದದ್ದು, ಈಗ 1721 ಆಗಿದೆ. ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಎಲ್ಲಾ ಮತಗಟ್ಟೆಗಳಿಗೆ ಈಗಾಗಲೇ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಿದ್ದು, ಇದೇ ರೀತಿ ಪೊಲೀಸರು ಸಹ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಕೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಮುಲ್ಲೈ ಮುಹಿಲನ್, ಪ್ರೊಬೆಷನರಿ ಐಪಿಎಸ್ ಅಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.