ಮಂಡ್ಯ: ಅಂಬೇಡ್ಕರ್ ಭಾವಚಿತ್ರಕ್ಕೆ ಸೆಗಣಿ; ದಲಿತ ಸಂಘಟನೆಗಳಿಂದ ಪ್ರತಿಭಟನೆ

Update: 2018-02-14 18:55 GMT

ಮಂಡ್ಯ, ಫೆ.14: ಶ್ರೀರಂಗಪಟ್ಟಣ ತಾಲೂಕಿನ ಮೇಳಾಪುರ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಸೆಗಣಿ ಬಳಿದು ಅವಮಾನ ಮಾಡಿದ್ದು, ದಲಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ತಡರಾತ್ರಿ ಈ ಕೃತ್ಯವೆಸಗಿದ್ದು, ಬುಧವಾರ ಬೆಳಗ್ಗೆ ವಿಷಯ ತಿಳಿದ ದಲಿತ ಕಾಲನಿ ನಿವಾಸಿಗಳು ಮತ್ತು ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಡಿವೈಎಸ್ಪಿ ವಿಶ್ವನಾಥ್, ಪಿಎಸ್ಸೈ ಪುನೀತ್, ಕಿಡಿಗೇಡಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಪ್ರತಿಭಟನಾನಿರತರನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.

ರವಿವಾರ ಸವರ್ಣೀಯರು ಮತ್ತು ದಲಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದಲ್ಲದೆ, ದಲಿತ ಮಹಿಳೆ ಮೇಲೆ ಹಲ್ಲೆ ಯತ್ನ ನಡೆಸಿದ ಬಗ್ಗೆ ಶ್ರೀರಂಗಪಟ್ಟಣ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರಬಹುದೆಂದು ಶಂಕಿಸಲಾಗಿದೆ.

ಮುನ್ನಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News