ಮಾಜಿ ಮೇಯರ್ ಅಶ್ರಫ್ ಸ್ಪರ್ಧಿಸಿದರೆ ಸ್ವಾಗತ: ಸಚಿವ ಖಾದರ್
ಮಂಗಳೂರು, ಫೆ.17: ಮಾಜಿ ಮೇಯರ್ ಕೆ. ಅಶ್ರಫ್ ಮಂಗಳೂರು (ಉಳ್ಳಾಲ) ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಸ್ವಾಗತಿಸುವೆ ಎಂದು ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ನಗರದ ಸರ್ಕ್ಯೂಟ್ ಹೌಸ್ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಅಶ್ರಫ್ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸಿ ಜೆ.ಆರ್. ಲೋಬೊರಿಗೆ ತೊಂದರೆ ಕೊಡುವುದು ಬೇಡ. ಅವರು ಮಂಗಳೂರು ಕ್ಷೇತ್ರದಲ್ಲೇ ಸ್ಪರ್ಧಿಸಲಿ. ಅವರಿಗೆ ಹೃತ್ಪೂರ್ವಕ ಸ್ವಾಗತ ಕೋರುವೆ ಎಂದರು.
ಅಶ್ರಫ್ ನನ್ನ ವಿರುದ್ಧ ಸ್ಪರ್ಧಿಸಲಿ ಎಂದು ವಿಶೇಷವಾಗಿ ಮನವಿ ಮಾಡುವೆ. ನಾಮಪತ್ರದ ಶುಲ್ಕವನ್ನು ಕೂಡ ಕಾಂಗ್ರೆಸ್ ಕಾರ್ಯಕರ್ತರು ಭರಿಸಲಿದ್ದಾರೆ ಎಂದು ವ್ಯಂಗ್ಯವಾಡಿದ ಖಾದರ್, ಬೇಕಿದ್ದರೆ ಕ್ಷೇತ್ರದ ಎಲ್ಲ ಗ್ರಾಮಗಳ ಪರಿಚಯವನ್ನು ಕಾರ್ಯಕರ್ತರು ಮಾಡಿಕೊಡಲು ಸಿದ್ಧರಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಪ್ರಚಾರ ಸಮಿತಿಯ ರಾಜ್ಯ ಸಂಚಾಲಕ ಈಶ್ವರ ಉಳ್ಳಾಲ, ಮಹಿಳಾ ಕಾಂಗ್ರೆಸ್ ದ.ಕ.ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ, ಕರಾವಳಿ ವಲಯ ಕಾಂಗ್ರೆಸ್ ಅಧ್ಯಕ್ಷ ಯು.ಬಿ.ಸಲೀಂ, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಜಿಪಂ ಮಾಜಿ ಸದಸ್ಯ ಮೆಲ್ವಿನ್ ಪಿಂಟೋ, ತಾಪಂ ಸದಸ್ಯ ಜಬ್ಬಾರ್ ಬೋಳಿಯಾರ್, ಮಾಜಿ ತಾಪಂ ಸದಸ್ಯ ಮುಹಮ್ಮದ್ ಮುಸ್ತಫಾ ಮತ್ತಿತರರು ಉಪಸ್ಥಿತರಿದ್ದರು.