ಮಡಿಕೇರಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Update: 2018-02-19 17:10 GMT

ಮಡಿಕೇರಿ,ಫೆ.19: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ವೀರಾಜಪೇಟೆ ಮೂಲದ ಬಿಟ್ಟಂಗಾಲ ಸಮೀಪದ ಪೆಗ್ಗರಿಕಾಡು ನಿವಾಸಿ ಈರಪ್ಪ (53) ಎಂಬುವರೇ ಮೃತಪಟ್ಟವರು.

ಕರಿಯಪ್ಪ ಎಂಬವರ ಪುತ್ರ ಈರಪ್ಪ ಫೆ. 15ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಸ್ಥಳೀಯರ ನೆರವಿನಿಂದ ವೀರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ವೈದ್ಯರು ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದರು. 

ವಿಷಯ ಅರಿತು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸುವ ಸಲುವಾಗಿ ಈರಪ್ಪ ಅವರನ್ನು ಪರಿಶೀಲಿಸಿದಾಗ ಜೀವವಿರುವುದು ಕಂಡು ಬಂದಿದೆ. ವೈದ್ಯರು ನೀಡಿದ ದ್ವಂದ್ವ ಹೇಳಿಕೆಯಿಂದ ವಿಚಲಿತರಾದ ಈರಪ್ಪ ಅವರ ಸಂಬಂಧಿಕರು ಮತ್ತು ಗ್ರಾಮಸ್ಥರು ವೈದ್ಯರ ವಿರುದ್ಧ ಸ್ಥಳದಲ್ಲೇ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದರು.

ಬಳಿಕ ಈರಪ್ಪ ಅವರಿಗೆ ವೀರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಫೆ.19ರಂದು ಚಿಕಿತ್ಸೆ ಫಲಕಾರಿಯಾಗದೆ ಈರಪ್ಪ ಮೃತಪಟ್ಟಿದ್ದಾರೆ. ಘಟನೆ ಕುರಿತಂತೆ ವೀರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News