×
Ad

2.50 ಲಕ್ಷ ಯುವಕರಿಗೆ ಪೂರ್ವ ಕಲಿಕೆ ತರಬೇತಿ: ಕೆ.ಜೆ.ಜಾರ್ಜ್

Update: 2018-02-26 21:39 IST

ಬೆಂಗಳೂರು, ಫೆ.26: ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಕಾರ್ಯಕ್ರಮದಡಿ ಪ್ರತಿ ವರ್ಷ 5 ಲಕ್ಷ ಉದ್ಯೋಗಾಕಾಂಕ್ಷಿಗಳಿಗೆ ವಿವಿಧ ಉದ್ಯೋಗ ವೃತ್ತಿಗಳಲ್ಲಿ ತರಬೇತಿ ನೀಡಿ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಆಯೋಜಿಸಿದ್ದ ಕೌಶಲ್ಯ ಭಾಗ್ಯ-ಪೂರ್ವ ಕಲಿಕೆಯನ್ನು ಗುರುತಿಸುವ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೌಶಲ್ಯ ಅಭಿವೃದ್ಧಿ ನಿಗಮದ ಮೂಲಕ ಈಗಾಗಲೆ 3 ಲಕ್ಷ ಯುವಕರಿಗೆ ವಿವಿಧ ಉದ್ಯೋಗಗಳ ಕುರಿತು ತರಬೇತಿ ನೀಡಲಾಗಿದೆ. ಇವತ್ತು 2.50 ಲಕ್ಷ ಯುವಕರಿಗೆ ತರಬೇತಿ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಜಾಗತಿಕ ಮಟ್ಟದಲ್ಲಿ ಭಾರತವು ಗುರುತಿಸಿಕೊಳ್ಳುವಲ್ಲಿ ಯುವ ಶಕ್ತಿಯ ಕೊಡುಗೆಯು ಅಪಾರವಾದದ್ದು ಎಂದು ಅವರು ಹೇಳಿದರು.

ರಾಜೀವ್‌ಗಾಂಧಿ ಪ್ರಧಾನಿಯಾಗಿದ್ದಾಗ ಯುವ ಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂಬ ಉದ್ದೇಶದಿಂದ ಶಿಕ್ಷಣ ಇಲಾಖೆಯನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನಾಗಿ ಮಾಡಿದರು. ಬಹುತೇಕ ರಾಷ್ಟ್ರಗಳು ಹೆಚ್ಚಿನ ಜನಸಂಖ್ಯೆಯನ್ನು ಸಮಸ್ಯೆಎಂದು ಭಾವಿಸುತ್ತವೆ. ಆದರೆ, ನಮ್ಮ ದೇಶವು ಮಾನವ ಸಂಪನ್ಮೂಲವನ್ನು ಸದ್ಭಳಕೆ ಮಾಡಿಕೊಂಡು ಅಭಿವೃದ್ಧಿಯ ಪಥದತ್ತ ಮುನ್ನಡೆಯುತ್ತಿದೆ ಎಂದು ಜಾರ್ಜ್ ತಿಳಿಸಿದರು.

ಸ್ವಾತಂತ್ರ ನಂತರ ದೇಶದ ಪ್ರಥಮ ಪ್ರಧಾನಿಯಾದ ಪಂಡಿತ್ ಜವಾಹರ್‌ಲಾಲ್ ನೆಹರು, ಪಂಚವಾರ್ಷಿಕ ಯೋಜನೆಗಳ ಮೂಲಕ ದೇಶದಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಂಡರು. ನಮ್ಮ ರಾಷ್ಟ್ರಪ್ರಬಲವಾಗಿದೆ. ಯುವ ಶಕ್ತಿಯು ಜವಾಬ್ದಾರಿ ಹೊರಲು ಸಿದ್ಧವಾಗಿದೆ ಎಂದು ಜಾರ್ಜ್ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿರುವ ಯುವ ಶಕ್ತಿಯನ್ನು ಸದ್ಭಳಕೆ ಮಾಡಿಕೊಳ್ಳಲು ಕೌಶಲ್ಯಾಭಿವೃದ್ಧಿ ಇಲಾಖೆಯನ್ನು ತಮ್ಮ ಅಧೀನದಲ್ಲೆ ಇಟ್ಟುಕೊಂಡು ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಯುವಕರು ಉದ್ಯೋಗಗಳನ್ನು ಪಡೆಯಲು ಸಹಕಾರಿಯಾಗುವಂತೆ ಅವರಿಗೆ ತರಬೇತಿ ನೀಡಿ ಸಿದ್ಧಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಕಾರವಾರದಲ್ಲಿ ಶಿಪ್‌ಯಾರ್ಡ್ ನಿರ್ಮಾಣವಾಗುತ್ತಿದೆ. ರಾಜ್ಯದ ಯುವಕರಿಗೆ ಹೇರಳವಾದ ಉದ್ಯೋಗ ಅವಕಾಶಗಳು ಲಭ್ಯವಾಗುತ್ತದೆ. ಈ ಉದ್ಯೋಗಗಳಿಗೆ ಅಗತ್ಯವಿರುವ ತಾಂತ್ರಿಕ ಕೌಶಲ್ಯಗಳ ತರಬೇತಿ ಪಡೆದರೆ ಉದ್ಯೋಗ ಅವಕಾಶಗಳು ಸಿಗುತ್ತವೆ ಎಂದು ಜಾರ್ಜ್ ತಿಳಿಸಿದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪ, ಯುವ ಸಬಲೀಕರಣದ ಆಶಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಂದಿದ್ದಾರೆ. ಯುವಕರ ಕೈಗೆ ಶಕ್ತಿ, ದುಡಿಯುವ ಕೈಗಳಿಗೆ ಉದ್ಯೋಗ ನೀಡಲು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ರಾಜ್ಯದ 17 ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗ, ಕೌಶಲ್ಯಾಭಿವೃದ್ಧಿ ಮೇಳಗಳನ್ನು ಆಯೋಜಿಸಲಾಗಿದೆ. ಯುವಕರಿಗೆ ಉದ್ಯೋಗಗಳನ್ನು ಪಡೆಯಲು ಸಹಕಾರಿಯಾಗುವಂತೆ ನೈಪುಣ್ಯತೆ, ಕೌಶಲ್ಯದ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದುಅವರು ಹೇಳಿದರು.

ವಿದ್ಯಾರ್ಥಿಗಳು ಹಾಗೂ ಯುವಕರು ಸಂದರ್ಶನಗಳನ್ನು ಎದುರಿಸಲು ಮಾಡಿಕೊಳ್ಳಬೇಕಾದ ಸಿದ್ಧತೆಗಳು, ಬಯೋಡೇಟಾ ಸಿದ್ಧಪಡಿಸುವುದು ಸೇರಿದಂತೆ ಇನ್ನಿತರ ತರಬೇತಿ ನೀಡಲು 177 ತಾಲೂಕು ಕೇಂದ್ರಗಳಲ್ಲೂ ಅವಕಾಶ ಕಲ್ಪಿಸಲಾಗಿದೆ. ನಮ್ಮ ದೇಶದ 12 ರಾಜ್ಯಗಳ ಪ್ರತಿನಿಧಿಗಳು, ನಮ್ಮ ರಾಜ್ಯಕ್ಕೆ ಭೇಟಿ ನೀಡಿ ಇಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ ಬಗ್ಗೆ ಅಧ್ಯಯನ ನಡೆಸಿಕೊಂಡು ಹೋಗಿವೆ ಎಂದು ಮುರಳೀಧರ ಹಾಲಪ್ಪ ತಿಳಿಸಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ, ಮೇಯರ್ ಆರ್.ಸಂಪತ್‌ರಾಜ್, ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರಕಾರದ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News