ರಾಜ್ಯದ ಹಲವು ಕಾಂಗ್ರೆಸ್ ನಾಯಕರಿಗೆ ಐಟಿ ಭೀತಿ.. !
Update: 2018-03-01 04:48 GMT
ಬೆಂಗಳೂರು,ಮಾ.1: ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಸಿಬಿಐ ಬಂಧಿಸಿದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ತಳಮಳ ಶುರುವಾಗಿದೆ.
ರಾಜ್ಯದಲ್ಲಿ ಹಲವು ಮಂದಿ ಪ್ರಭಾವಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿರಿಸಿ ಆದಾಯ ತೆರಿಗೆ ಇಲಾಖೆಯು ದಾಳಿಗೆ ಸಿದ್ದತೆ ನಡೆಸಿದೆ ಎಂದು ತಿಳಿದು ಬಂದಿದೆ.
ಈ ಹಿಂದೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಅವರ ಆಪ್ತರ ಮನೆ ಮೇಲೆ ದಾಳಿ ನಡೆಸಿ ಅಪಾರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದ ಆದಾಯ ತೆರಿಗೆ ಇಲಾಖೆಯು ಚುನಾವಣೆಯ ಹೊತ್ತಿಗೆ ಹಲವು ಮಂದಿ ಕಾಂಗ್ರೆಸ್ ನಾಯಕರನ್ನು ಸಂಕಷ್ಟಕ್ಕೆ ಸಿಲುಕಿಸುವ ತಯಾರಿಯಲ್ಲಿದೆ ಎಂದು ತಿಳಿದು ಬಂದಿದೆ.
ಕರ್ನಾಟಕದಲ್ಲಿ ಚುನಾವಣೆ ಘೋಷಣೆಯಾದ ಬೆನ್ನಲೇ ಐಟಿ ಇಲಾಖೆಯು ಕೆಲವು ಕಾಂಗ್ರೆಸ್ ನಾಯಕರ ಮನೆ ಮೇಲೆ ದಾಳಿ ನಡೆಸಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸೂಚನೆ ಮೇರೆಗೆ ಆದಾಯ ತೆರಿಗೆ ಇಲಾಖೆ ದಾಳಿಗೆ ತಯಾರಿ ನಡೆಸಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.