ಉಡುಪಿ : ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಮತದಾರ ಜಾಗೃತಿ ಪ್ರತಿಜ್ಞೆ
ಉಡುಪಿ, ಮಾ. 8: ಪರೀಕ್ಷೆಗೆ ಸಿದ್ಧತೆ ನಡೆಸುವುದರೊಂದಿಗೆ ವಿದ್ಯಾರ್ಥಿಗಳಿಗೆ ಪ್ರೇರಣೆ ತುಂಬುವ ಕೆಲಸ ಮಾಡಬೇಕು. ಇದರೊಂದಿಗೆ ಶೀಘ್ರವೇ ಬರುವ ಚುನಾವಣೆಗೆ ಬೂತ್ ಹಂತದಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವಲ್ಲಿ ಸಹ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಉಡುಪಿ ಜಿಪಂನ ಮುಖ್ಯ ಕಾರ್ಯ ನಿರ್ವಹಾಧಿಕಾರಿ ಶಿವಾನಂದ ಕಾಪಸಿ ಹೇಳಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ, ವಳಕಾಡಿನ ಸರಕಾರಿ ಸಂಯುಕ್ತ ಪ್ರೌಢಶಾಲೆ ಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಅವರು ಈ ವಿಷಯ ತಿಳಿಸಿದರು.
ಇದೇ ಸಂದರ್ಭದಲ್ಲಿ ಮತದಾರರ ಪ್ರತಿಜ್ಞೆಯನ್ನು ಸಿಇಓ ಅವರು ಶಿಕ್ಷಕರಿಗೆ ಬೋಧಿಸಿದರು. ಎಸ್ಸೆಸೆಲ್ಸಿ ಪರೀಕ್ಷೆಗಳನ್ನು ಯಾವುದೇ ಲೋಪವಾಗದಂತೆ ನಡೆಸ ಬೇಕು. ಗುಣಮಟ್ಟದ ಫಲಿತಾಂಶದಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ಉಳಿಸಿ ಕೊಳ್ಳುವಲ್ಲಿ ನಡೆಸುತ್ತಿರುವ ಪ್ರಯತ್ನಕ್ಕೆ ಅಂತಿಮ ಹಂತದ ಸಿದ್ದತೆಗಳನ್ನು ಬದ್ದತೆ ಯಿಂದ ನಡೆಸಲು ಸೂಕ್ತ ಮಾರ್ಗದರ್ಶನವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನ ಕಾರಿಂಜ ನೀಡಿದರು.
ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಕಾಮತ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶಪ್ಪ ಕೆ.ಡಿ., ಸರ್ವಶಿಕ್ಷಣ ಅಭಿಯಾನದ ಸಮನ್ವಯಾ ಧಿಕಾರಿ ಪ್ರಭಾಕರ ಮಿತ್ಯಾಂತ, ಸುಬ್ರಹ್ಮಣ್ಯ, ವೆಂಕಟೇಶ ನಾಯಕ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ, ವಳಕಾಡು ಪ್ರೌಢಶಾಲಾ ಮುಖ್ಯ ಶಿಕ್ಷಕಿ ನಿರ್ಮಲಾ ಬಿ. ಉಪಸ್ಥಿತರಿದ್ದರು. ಚಂದಾ ್ರನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.