ರಾಜ್ಯ ಸರಕಾರದ ಸಾಧನೆಯನ್ನು ಮನೆ ಮನೆಗೆ ತೆರಳಿ ತಿಳಿಸಲು ರಾಹುಲ್ ಸೂಚನೆ : ಅಭಯಚಂದ್ರ ಜೈನ್

Update: 2018-03-21 07:01 GMT

ಮಂಗಳೂರು,ಮಾ,20:ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಸಾಧನೆಯನ್ನು ಮನೆ ಮನೆಗೆ ತಲುಪಿಸಿ ಮರಳಿ ಬಹುಮತದಿಂದ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಒಗ್ಗಟ್ಟಾಗಿ ಶ್ರಮಿಸಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಪಕ್ಷದ ಬ್ಲಾಕ್ ಮಟ್ಟದ ಅಧ್ಯಕ್ಷರು ಮತ್ತು ಇತರ ಮುಖಂಡರ ಸಭೆಯಲ್ಲಿ ಕರೆ ನೀಡಿದರು ಎಂದು ಸಭೆಯಲ್ಲಿ ಭಾಗವಹಿಸಿದ ಪಕ್ಷದ ಹಿರಿಯ ಮುಖಂಡ ಅಭಯಚಂದ್ರ ಜೈನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಇಂದು ಬೆಳಗ್ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 26 ಮಂದಿ ಬ್ಲಾಕ್ ಅಧ್ಯಕ್ಷರು ಹಾಗೂ ಎರಡು ಜಿಲ್ಲೆಗಳ ಜಿಲ್ಲಾಧ್ಯಕ್ಷರು ಮತ್ತು ಕೆಪಿಸಿಸಿ ಮುಖಂಡರು ಹಾಗೂ ಪಕ್ಷದ ಹಿರಿಯ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ರಾಹುಲ್ ಗಾಂಧಿ ಉಭಯ ಜಿಲ್ಲೆಗಳಲ್ಲಿ ರೋಡ್ ಶೋ, ಸಭೆ ನಡೆಸಿದ ಬಳಿಕ ಜನರ ಉತ್ಸಾಹವನ್ನು ಕಂಡು ಇನ್ನಷ್ಟು ಹುರುಪಿನಿಂದ ಇಂದು ನಡೆದ ಸಭೆಯಲ್ಲಿ ಪಕ್ಷದ ಮುಖಂಡರನ್ನು ಪೋತ್ಸಾಹಿಸುವ ಮಾತುಗಳನ್ನಾಡಿದರು. ಪಕ್ಷದ ಕಾರ್ಯಕರ್ತರ ಪ್ರಾಮಾಣಿಕ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಅನ್ನು ಬಲಪಡಿಸಲು ಒಂದಾಗಿ ಶ್ರಮಿಸಬೇಕಾಗಿದೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ದ.ಕ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಬೇಕು ಎಂದು ರಾಹುಲ್ ಪಕ್ಷದ ಮುಖಂಡರನ್ನು ಪೋತ್ಸಾಹಿಸಿ ಮಾತನಾಡಿರುವುದಾಗಿ ಅಭಯಚಂದ್ರ ಜೈನ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News