ಬೇಲೂರಿನ ಕಾಂಗ್ರೆಸ್ ಶಾಸಕ ರುದ್ರೇಶ್ ಗೌಡ ನಿಧನ

Update: 2018-03-24 14:20 GMT

ಬೆಂಗಳೂರು, ಮಾ.24: ಹಾಸನ ಜಿಲ್ಲೆಯ ಬೇಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವೈ.ಎನ್. ರುದ್ರೇಶ್ ಗೌಡ(63 ವರ್ಷ) ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು.

 ರಾಜ್ಯಸಭಾ ಚುನಾವಣೆಗೆ ಮತ ಚಲಾಯಿಸಲು ಶುಕ್ರವಾರ ಬೆಂಗಳೂರಿಗೆ ಬಂದಿದ್ದ ರುದ್ರೇಶ್ ಗೌಡರಿಗೆ ಬೆಳಗ್ಗೆ ಹೃದಯಾಘಾತವಾಗಿದ್ದು, ಅವರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಶನಿವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ ರುದ್ರೇಶ್ ಗೌಡರ ಆರೋಗ್ಯ ವಿಚಾರಿಸಿದ್ದರು.

1985ರಲ್ಲಿ ಜನತಾ ಪಾರ್ಟಿಯ ಮೂಲಕ ರಾಜಕೀಯ ಪ್ರವೇಶಿಸಿದ್ದ ರುದ್ರೇಶ್ 1996ರಲ್ಲಿ ಜನತಾ ಪಕ್ಷ ಟಿಕೆಟ್‌ನಲ್ಲಿ ಲೋಕಸಭಾ ಸದಸ್ಯರಾಗಿ ಚುನಾಯಿತರಾಗಿದ್ದರು. 2004ರಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದ ರುದ್ರೇಶ್ 2008 ಹಾಗೂ 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ಚುನಾಯಿತರಾಗಿದ್ದರು. ರುದ್ರೇಶ್ ಹಠಾತ್ ನಿಧನದಿಂದ ಬೇಲೂರಿನಲ್ಲಿ ಶೋಕ ಮಡುಗಟ್ಟಿದೆ. ಇಂದು ಸಂಜೆ 4 ಗಂಟೆಗೆ ರುದ್ರೇಶ್ ಮೃತದೇಹವನ್ನು ಬೇಲೂರಿಗೆ ಕೊಂಡೊಯ್ಯಲಾಗುತ್ತದೆ.

ಹಾಸನದ ಕೆಪಿಸಿಸಿ ಕಚೇರಿಯಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಮೃತರು ಪತ್ನಿ ಕೀರ್ತನಾ, ಪುತ್ರಿ, ಸಹೋದರರು ಹಾಗೂ ಅಪಾರ ಬೆಂಬಲಿಗರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News