×
Ad

ಮಡಿಕೇರಿ: ನೀತಿ ಸಂಹಿತೆ ಜಾರಿ; ನಿಯಮ ಪಾಲನೆಗೆ ಕೊಡಗು ಜಿಲ್ಲಾಡಳಿತ ಸೂಚನೆ

Update: 2018-03-27 23:59 IST

ಮಡಿಕೇರಿ ಮಾ.27 : ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟವಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಅಧಿಕಾರಿಗಳು ನಿಯಮ ಪಾಲನೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಸೂಚನೆ ನೀಡಿದ್ದಾರೆ. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಏಪ್ರಿಲ್ 17 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 24 ಕೊನೆಯ ದಿನವಾಗಿದೆ. ಏಪ್ರಿಲ್ 25 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 27 ಕೊನೆಯ ದಿನವಾಗಿದೆ. ಮೇ 12 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 15 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಮಾಹಿತಿ ನೀಡಿದರು.  

ಜಿಲ್ಲೆಯ 2 ವಿಧಾನಸಭಾ ಕ್ಷೇತ್ರದಲ್ಲಿ 4,26,020 ಮತದಾರರು ಇದ್ದು, ಇವರಲ್ಲಿ 4,25,023 ಸಾಮಾನ್ಯ ಮತದಾರರು 997 ಸೇವಾ ಮತದಾರರು ಇದ್ದಾರೆ. ಇವರಲ್ಲಿ ಪುರುಷ ಮತದಾರರು 2,13,060, ಹಾಗೆಯೇ 2,12,944 ಮಹಿಳಾ ಮತದಾರರು ಇದ್ದಾರೆ ಎಂದು ತಿಳಿಸಿದರು.

2013 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶೇ.73.29 ರಷ್ಟು ಮತದಾನವಾಗಿತ್ತು. ಈ ಬಾರಿ ಶೇ.75ಕ್ಕಿಂತ ಹೆಚ್ಚು ಮತದಾನವಾಗಲು ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮ ಆಯೋಜಿಸಿ ಹೆಚ್ಚಿನ ಮತದಾನ ಆಗುವಂತೆ ಸ್ವೀಪ್ ಕಾರ್ಯಕ್ರಮ ಏರ್ಪಡಿಸಲಾಗುವುದು. ಜಿಲ್ಲೆಯಲ್ಲಿ 530 ಮತದಾನ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, 08 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ಒಟ್ಟಾರೆ 538 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಪಿ.ಐ.ಶ್ರೀವಿದ್ಯಾ ಮಾಹಿತಿ ನೀಡಿದರು.

ಬ್ಯಾಲೆಟ್ ಯೂನಿಟ್ ಮತ್ತು ಕಂಟ್ರೋಲ್ ಯೂನಿಟ್ ಜೊತೆಗೆ ಈ ಬಾರಿ ವಿವಿಪ್ಯಾಟ್ ಬಳಸಲಾಗುತ್ತಿದೆ. ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್ ಪರಿಶೀಲನೆ ಪೂರ್ಣಗೊಂಡಿದೆ. ಮತದಾನ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸಲು 3,365 ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ಮಾದರಿ ನೀತಿ ಸಂಹಿತೆ ತಂಡವನ್ನು ರಚಿಸಲಾಗಿದ್ದು, 54 ಮಂದಿ ಈ ವಿಭಾಗದಲ್ಲಿ ಕಾರ್ಯನಿರ್ವಹಿಸಲಿದ್ದಾರೆ. 41 ಸೆಕ್ಟರ್ ಅಧಿಕಾರಿಗಳು, 36 ಲೆಕ್ಕ ಪರಿಶೀಲನಾ ತಂಡ, 18 ಫ್ಲೈಯಿಂಗ್ ಸ್ಕ್ಯಾಡ್ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.  

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರಪ್ರಸಾದ್ ಮಾತನಾಡಿ ಈಗಾಗಲೇ ಚುನಾವಣೆಯ ದಿನಾಂಕ ಘೋಷಣೆಯಾಗಿರುವುದರಿಂದ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ ಎಂದು ಹೇಳಿದರು. 

ಜಿಲ್ಲೆಯಲ್ಲಿ 12 ಕಡೆ ಚೆಕ್‍ಪೋಸ್ಟ್ ತೆರೆಯಲಾಗುವುದು. ಇದರಲ್ಲಿ  ಕುಟ್ಟ, ಮಾಕುಟ್ಟ ಮತ್ತು ಕರಿಕೆ ಅಂತರ ರಾಜ್ಯ ಚೆಕ್ ಪೋಸ್ಟ್ ಒಳಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ತಿಳಿಸಿದರು.

ಚುನಾವಣಾ ಸಂಬಂಧ ಪೊಲೀಸ್ ಇಲಾಖೆ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.  

ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ 08272-224300 ಉಚಿತ ಕರೆ ಮಾಡಬಹುದಾಗಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ ಸತೀಶ್ ಕುಮಾರ್ ಅವರು ವಿವಿಪ್ಯಾಟ್ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News