ಸಿಎಂ ಆಪ್ತ ಕೆಂಪಯ್ಯ ಹಾಗೂ ರಾಮಯ್ಯರನ್ನು ಗಡಿಪಾರು ಮಾಡಿ: ಶಾಸಕ ಜಿ.ಟಿ.ದೇವೇಗೌಡ
ಮೈಸೂರು,ಏ.1: ರಾಜ್ಯದಲ್ಲಿ ನ್ಯಾಯ ಸಮ್ಮತ ಚುನಾವಣೆ ನಡೆಯಬೇಕಾದರೆ ಮುಖ್ಯಮಂತ್ರಿಗಳ ಆಪ್ತರಾದ ನಿವೃತ್ತ ಐ.ಪಿ.ಎಸ್ ಆಧಿಕಾರಿ ಕೆಂಪಯ್ಯ ಹಾಗೂ ಮುಖ್ಯಮಂತ್ರಿಗಳ ವಿಶೇಷ ಆಧಿಕಾರಿ ರಾಮಯ್ಯ ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಮಾಜಿ ಸಚಿವ ಹಾಗೂ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಶಾಸಕ ಜಿ.ಟಿ.ದೇವೇಗೌಡ ಒತ್ತಾಯಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ಮೂರು ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರಾದ್ಯಂತ ಚುನಾವಣಾ ಪ್ರಚಾರ ಮಾಡುತ್ತ ಹಣ ಮತ್ತು ಹೆಂಡವನ್ನು ನೀಡುವುದರ ಮುಖಾಂತರ ಕಲುಷಿತ ವಾತಾವರಣ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಇದಕ್ಕೆ ಕೆಂಪಯ್ಯ ಹಾಗೂ ರಾಮಯ್ಯ ಅವರ ಸಹಕಾರವಿದ್ದು, ಅಧಿಕಾರಿಗಳನ್ನು ನಿಯಂತ್ರಿಸುತ್ತಿದ್ದಾರೆ ಎಂದು ಆರೊಪಿಸಿದರು.
ರಾಜ್ಯಾದ ಎಲ್ಲಾ ಕಡೆಗಳಲ್ಲಿ ಶಾಂತಿಯುತ ಚುನಾವಣೆ ನಡೆಯಬೇಕಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಅಧಿಕಾರಿಗಳಾದ ಇವರನ್ನು ರಾಜ್ಯದಿಂದ ಹೊರಗಿಡಬೇಕು ಎಂದು ಆಗ್ರಹಿಸಿದರು.