ಪೋಸ್ಟ್ ಕಾರ್ಡ್ ನ್ಯೂಸ್ ವಿರುದ್ಧ ದೂರು ನೀಡಿದ ಪ್ರಕಾಶ್ ರೈ
Update: 2018-04-05 14:24 GMT
ಬೆಂಗಳೂರು, ಎ.5: ತನ್ನ ವಿರುದ್ಧ ಅವಹೇಳನಕಾರಿ ಲೇಖನಗಳನ್ನು ಪ್ರಕಟಿಸಿದ ಆರೋಪದಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್ ವಿರುದ್ಧ ನಟ ಪ್ರಕಾಶ್ ರೈ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ, ಮಾಲಕ ಹಾಗು ಲೇಖನ ಬರೆದವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. “ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ನಾವು ಪ್ರಕರಣ ದಾಖಲಿಸಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಜೈನ ಮುನಿಯೊಬ್ಬರ ಮೇಲೆ ಮುಸ್ಲಿಮ್ ಯುವಕ ಹಲ್ಲೆ ನಡೆಸಿದ್ದಾನೆ ಎಂದು ಸುಳ್ಳು ಸುದ್ದಿ ಪ್ರಕಟಿಸಿದ್ದಕ್ಕಾಗಿ ಇತ್ತೀಚೆಗೆ ಪೋಸ್ಟ್ ಕಾರ್ಡ್ ನ್ಯೂಸ್ ನ ಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆಯನ್ನು ಪೊಲೀಸರು ಬಂಧಿಸಿದ್ದರು.
ಅಪಘಾತವೊಂದರಲ್ಲಿ ಜೈನ ಮುನಿಯೊಬ್ಬರು ಗಾಯಗೊಂಡಿದ್ದರು. ಆದರೆ ಪೋಸ್ಟ್ ಕಾರ್ಡ್ ನ್ಯೂಸ್ ಜೈನಮುನಿಯ ಮೇಲೆ ಮುಸ್ಲಿಮ್ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಸುಳ್ಳು ಸುದ್ದಿ ಪ್ರಕಟಿಸಿತ್ತು.