ಬಿಬಿಎಂಪಿ ಅಧಿಕಾರಿಗಳಿಂದ ನಕಲಿ ಗುರುತಿನ ಚೀಟಿ ವಿತರಣೆ ಆರೋಪ: ಜೆಡಿಎಸ್ ಪ್ರತಿಭಟನೆ

Update: 2018-04-10 12:59 GMT

ಬೆಂಗಳೂರು, ಎ.10: ಬೃಹತ್ ಬೆಂಗಳೂರು ಮಹಾನಗರ (ಬಿಬಿಎಂಪಿ) ವ್ಯಾಪ್ತಿಯ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಬಿಎಂಪಿ ಅಧಿಕಾರಿಗಳು ನಕಲಿ ಗುರುತಿನ ಚೀಟಿ ಮಾಡಿಕೊಡುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಮಂಗಳವಾರ ದಾಸರಹಳ್ಳಿ ಬಿಬಿಎಂಪಿ ಕಚೇರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಿ ನಕಲಿ ಗುರುತಿನ ಚೀಟಿ ಮಾಡಿಕೊಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು. ಈ ಅಕ್ರಮದಲ್ಲಿ ಬಿಬಿಎಂಪಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ದೂರಿದ ಪ್ರತಿಭಟನಾಕಾರರು, ನಕಲಿ ಮತದಾರರ ಎಲ್ಲ ಹೆಸರನ್ನು ಕೈಬಿಟ್ಟು, ನ್ಯಾಯಸಮ್ಮತ ಚುನಾವಣೆ ನಡೆಸಬೇಕೆಂದು ಆಗ್ರಹಿಸಿದರು.

ದಾಸರಹಳ್ಳಿ ಸುತ್ತಮುತ್ತ ಹಲವಾರು ಕಾಲೇಜುಗಳಿದ್ದು, ಹೊರ ರಾಜ್ಯಗಳ ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಹೊರರಾಜ್ಯಗಳ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಗೆ ಸೇರಿಸಿ ನಕಲಿ ಗುರುತಿನ ಚೀಟಿ ಮಾಡಿಕೊಡಲಾಗುತ್ತಿದೆ. ಇದನ್ನು ಸಂಬಂಧಪಟ್ಟ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಮುಂದಾದರು. ಆದರೆ ಇದ್ಯಾವುದನ್ನು ಲೆಕ್ಕಿಸದ ಪ್ರತಿಭಟನಾಕಾರರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ, ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಪ್ರತಿಭಟನೆಯಲ್ಲಿ ನೂರಾರು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News