ಬಾದಾಮಿಯಲ್ಲಿ ಸಿದ್ದು - ಯಡ್ಡಿ ಬಿಗ್ ಫೈಟ್?

Update: 2018-04-21 17:14 GMT

ಬೆಂಗಳೂರು, ಎ.21: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆಯಿಂದ ತೀವ್ರ  ಕುತೂಹಲ ಕೆರಳಿಸಿರುವ ಬಾದಾಮಿ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲ ಪ್ರತಿಸ್ಪರ್ಧಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಬಾದಾಮಿಯಲ್ಲಿ ಬಿಜೆಪಿಯಿಂದ ಬಿಎಸ್. ಯಡಿಯೂರಪ್ಪ ಸ್ಪರ್ಧಿಸಲಿದ್ದಾರೆ ಎನ್ನುವ ಬಗ್ಗೆ ಸುಳಿವು ನೀಡಿದ್ದಾರೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವೇಣುಗೋಪಾಲ್, “ಸಿದ್ದರಾಮಯ್ಯ ನಮ್ಮ ಕಡೆಯಿಂದ ಸ್ಪರ್ಧಿಸಬೇಕು ಎನ್ನುವುದು ಉತ್ತರ ಕರ್ನಾಟಕ ಜನತೆಯ ಬೇಡಿಕೆಯಾಗಿದೆ. ಪ್ರತಿನಿತ್ಯ ನನಗೆ ಈ ವಿಷಯಕ್ಕೆ ಸಂಬಂಧಿಸಿ ಕಾರ್ಯಕರ್ತರಿಂದ ಸಾವಿರಾರು ಕರೆಗಳು ಬರುತ್ತಿವೆ. ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ. ಅವರ ನಡೆಯನ್ನು ನಾವು ಬೆಂಬಲಿಸುತ್ತೇವೆ ಹಾಗು ಇದು ನಮ್ಮ ಗೆಲುವಿಗೆ ಸಹಾಯಕವಾಗಲಿದೆ” ಎಂದು ಹೇಳಿದ್ದಾರೆ.

ಐದು ಕ್ಷೇತ್ರಗಳಿಗೆ ಸಂಬಂಧಿಸಿ ಕಾಂಗ್ರೆಸ್ ಇನ್ನಷ್ಟೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಬೇಕಿದೆ. ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧಿಸಲಿದ್ದಾರೆಯೇ ಎನ್ನುವುದು ಕೂಡ ಇನ್ನಷ್ಟೇ ಸ್ಪಷ್ಟಗೊಳ್ಳಬೇಕಾಗಿದೆ. ಆದರೆ ಈ ನಡುವೆ ಬಾದಾಮಿಯಿಂದ ಯಡಿಯೂರಪ್ಪ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಕೆರಳಿಸಿದೆ. ಆದರೆ ಈ ಬಗ್ಗೆ ಬಿಜೆಪಿಯು ಸ್ಪಷ್ಟಪಡಿಸಬೇಕಾಗಿದೆ. ಒಂದು ವೇಳೆ ಘಟಾನುಘಟಿಗಳ ಸ್ಪರ್ಧೆ ಇಲ್ಲಿ ನಡೆದರೆ ಬಾದಾಮಿ ರಾಜ್ಯದಲ್ಲೇ ಕುತೂಹಲದ ಕ್ಷೇತ್ರವಾಗಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News