ಎ.26 ರಂದು ಕರ್ನಾಟಕಕ್ಕೆ ರಾಹುಲ್‌ಗಾಂಧಿ ಆಗಮನ

Update: 2018-04-22 14:37 GMT

ಬೆಂಗಳೂರು, ಎ.22: ಎರಡು ದಿನಗಳ ರಾಜ್ಯ ಭೇಟಿಗಾಗಿ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಎ.26 ರಂದು ಆಗಮಿಸಲಿದ್ದಾರೆ. ಈ ಭೇಟಿ ವೇಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಎ.26 ರಂದು ಹೊಸದಿಲ್ಲಿಯಿಂದ ವಿಮಾನದ ಮೂಲಕ ಗೋವಾಗೆ ಆಗಮಿಸಲಿರುವ ರಾಹುಲ್‌ಗಾಂಧಿ, ಅಲ್ಲಿಂದ ಚಾಪರ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾಗೆ ತಲುಪಲಿದ್ದಾರೆ. ಅಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ. ಆನಂತರ, ಕುಮಟಾ ಹಾಗೂ ಭಟ್ಕಳದಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಮುರುಡೇಶ್ವರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಎ.27 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಆಯೋಜಿಸಿರುವ ಸಭೆಯಲ್ಲಿ ಪಾಲ್ಗೊಂಡ ನಂತರ, ಧರ್ಮಸ್ಥಳದ ಮಂಜುನಾಥೇಶ್ವರ ದೇವಸ್ಥಾನಕ್ಕೆ ರಾಹುಲ್‌ಗಾಂಧಿ ಭೇಟಿ ನೀಡಲಿದ್ದಾರೆ. ಅಲ್ಲಿಂದ, ಕೊಡಗು ಜಿಲ್ಲೆಯ ಗೋಣಿಕೊಪ್ಪಲುವಿನಲ್ಲಿ ಆಯೋಜಿಸಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಆನಂತರ, ಗೋಣಿಕೊಪ್ಪಲುವಿನಿಂದ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಆಯೋಜಿಸಿರುವ ಸಭೆಯಲ್ಲಿ ಪಾಲ್ಗೊಂಡ ಬಳಿಕ ರಾಹುಲ್‌ಗಾಂಧಿ ಮೈಸೂರು ವಿಮಾನ ನಿಲ್ದಾಣದಿಂದ ಹೊಸದಿಲ್ಲಿಗೆ ವಾಪಸ್ ತೆರಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News