ಬಿಜೆಪಿಯ ಅರ್ಧದಷ್ಟು ಟಿಕೆಟ್ ಮಾರಾಟ: ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಆರೋಪ

Update: 2018-04-23 15:13 GMT

ಬೆಂಗಳೂರು, ಎ. 23: ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳ ಪೈಕಿ ಶೇಕಡ ಅರ್ಧದಷ್ಟು ಟಿಕೆಟ್‌ಗಳನ್ನು ಬಿಜೆಪಿ ಕೋಟಿ-ಕೋಟಿ ರೂ.ಗಳಿಗೆ ಮಾರಾಟ ಮಾಡಲಾಗಿದೆ ಎಂದು ಬಸವನಬಾಗೇವಾಡಿ ಟಿಕೆಟ್ ಕೈತಪ್ಪಿದ್ದರಿಂದ ಜೆಡಿಎಸ್ ಅಭ್ಯರ್ಥಿಯಾಗಿರುವ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಆರೋಪಿಸಿದ್ದಾರೆ.

ಸೋಮವಾರ ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನನಗೆ ಮೋಸ ಮಾಡಿದೆ. ನನಗೆ ಬಿಜೆಪಿ ಟಿಕೆಟ್ ನೀಡದಿರುವುದು ನೋವು ತಂದಿದೆ. ಹೀಗಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ಸ್ಪಷ್ಟಣೆ ನೀಡಿದರು.

ಬಿಜೆಪಿ ಪಕ್ಷ ಸಂಘಟನೆಗಾಗಿ ಶ್ರಮಿಸಿದ ನಾನೂ ಇದೀಗ ಬಿಜೆಪಿ ವಿರುದ್ಧವೇ ಬಸವನಬಾಗೇವಾಡಿ ಕ್ಷೇತ್ರದಿಂದಲೇ ಸ್ಪರ್ಧಿಸಿದ್ದೇನೆಂದ ಅವರು, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗೂ ಬಿಜೆಪಿ, ಕೋಟ್ಯಂತರ ರೂ. ಹಣವನ್ನು ಪಡೆದು ಟಿಕೆಟ್ ನೀಡಲಾಗಿದೆ ಎಂದು ದೂರಿದರು.

ರಾಜ್ಯದ 224 ಕ್ಷೇತ್ರಗಳ ಪೈಕಿ 112 ಟಿಕೆಟ್‌ಗಳನ್ನು ಬಿಜೆಪಿ ದುಡ್ಡಿಗೆ ಮಾರಾಟ ಮಾಡಿಕೊಂಡಿದೆ. ಚುನಾವಣೆಯಲ್ಲಿ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆಂದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಭರವಸೆ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News