ಮಡಿಕೇರಿ : ಸಲ್ಲಿಕೆಯಾಗಿದ್ದ 25 ಮಂದಿ ನಾಮಪತ್ರದಲ್ಲಿ ಒಬ್ಬರ ನಾಮಪತ್ರ ತಿರಸ್ಕೃತ
Update: 2018-04-25 23:13 IST
ಮಡಿಕೇರಿ,ಎ.25 :ವಿಧಾನಸಭಾ ಚುನಾವಣೆ ಸಂಬಂಧ ನಾಮಪತ್ರ ಪರಿಶೀಲನಾ ಕಾರ್ಯವು ಎರಡು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆಯಿತು.
ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 14 ಮಂದಿ ನಾಮಪತ್ರ ಸಲ್ಲಿಸಿದ್ದರು. ಇವರಲ್ಲಿ ಒಬ್ಬರ (ವೆಂಕಟೇಶ ಬಿ.ಗೌಡ) ನಾಮಪತ್ರ ತಿರಸ್ಕೃತಗೊಂಡಿದ್ದು, ಉಳಿದಂತೆ 13 ಮಂದಿಯ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿ ರಮೇಶ್ ಪಿ.ಕೊನರೆಡ್ಡಿ ಅವರು ತಿಳಿಸಿದ್ದಾರೆ.
ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 11 ಮಂದಿ ನಾಮಪತ್ರ ಸಲ್ಲಿಸಿದ್ದರು. ಅವರಲ್ಲಿ ಎಲ್ಲರ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ರಾಜು ಅವರು ಮಾಹಿತಿ ನೀಡಿದ್ದಾರೆ.
ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 27 ಕೊನೆಯ ದಿನವಾಗಿದೆ. ಮೇ 12 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಮತದಾನ ನಡೆಯಲಿದೆ. ಮೇ 15 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.